ರಾಜ್ಯ

ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಹರಿದ ಶಾಸಕ ಸಿಟಿ ರವಿ ಕಾರು, ಇಬ್ಬರ ದುರ್ಮರಣ

Srinivasamurthy VN
ತುಮಕೂರು: ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಶಾಸಕ ಸಿಟಿ ರವಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ ತುಮಕೂರಿನಲ್ಲಿ ನಡೆದಿದೆ.
ಮೂಲಗಳ ಪ್ರಕಾರ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ  ಊರ್ಕೇನ ಹಳ್ಳಿ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಸುನಿಲ್ ಗೌಡ ಮತ್ತೆ ಶಶಿಕುಮಾರ್ ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳಾಗಿದ್ದು, ಇಬ್ಬರ ಮೃತದೇಹವನ್ನು ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. 
ಕನಕಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ಯುವಕರು ಕೊಲ್ಲೂರು, ಧರ್ಮಸ್ಥಳ ದೇವಾಲಯಗಳ ದರ್ಶನ ಮಾಡಿ ವಾಪಸ್ ತೆರಳುವಾಗ ಈ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಬಂದ ಸಿಟಿ ರವಿ ಅವರ ಫಾರ್ಚೂನರ್ ಕಾರು ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಸುನಿಲ್ ಗೌಡ ಮತ್ತು ಶಶಿಕುಮಾರ್ ಎಂಬವರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುನಿರಾಜು, ಜಯಚಂದ್ರ, ಪುನೀತ್ ಹಾಗೂ ಮಂಜುನಾಥ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಸಿಟಿ ರವಿ ಮತ್ತು ಆತನ ಜೊತೆ ಪ್ರಯಾಣಿಸುತ್ತಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬೆಂಗಳೂರಿಗೆ ಸಾಗಿಸಲಾಗಿದ್ದು, ನಗರದ ವಿಕ್ರಮ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.
ಸಿ.ಟಿ ರವಿ ಅವರ ಕಾರಿನಲ್ಲಿ ಮೂರು ಜನ ಇದ್ದರು. ಘಟನೆಯ ಬಳಿಕ ಶಾಸಕರು ಬೇರೆ ಕಾರು ಹತ್ತಿ ಹೊರಟು ಹೋಗಿದ್ದಾರೆ. ಆದರೆ ಬಳಿಕ ನಮ್ಮನ್ನು ಯಾರೂ ಕೆಳೋಕೆ ಬಂದಿಲ್ಲ ಎಂದು ಗಾಯಾಳು ಪುನೀತ್ ಆರೋಪಿಸಿದ್ದಾರೆ. ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SCROLL FOR NEXT