ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪರಿಚಯಿಸುವ ನಿರ್ಧಾರಕ್ಕೆ ಸರ್ಕಾರ ಬದ್ಧವಾಗಿದ್ದು, ನಿರ್ಣಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಜಿ ಪರಮೇಶ್ವರ ಅವರು ಹೇಳಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ ಅವರು, ಆಂಗ್ಲ ಮಾಧ್ಯಮ ಕುರಿತ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಾವು ಬದ್ಧವಾಗಿದ್ದು, ನಿರ್ಣಯವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಅಂತೆಯೇ ತಾವು ಯಾವುದೇ ಕಾರಣಕ್ಕೂ ಮಾತೃಭಾಷೆ ಕನ್ನಡವನ್ನು ಕಡೆಗಣಿಸುವುದಿಲ್ಲ. ಮಾತೃಭಾಷೆಯೊಂದಿಗೆ ಇಂಗ್ಲಿಷ್ ಶಿಕ್ಷಣ ಆರಂಭವಾಗುತ್ತದೆ. ಆಧುನಿಕ ಸಮಾಜದಲ್ಲಿ ನಮ್ಮ ಮಕ್ಕಳೂ ಕೂಡ ಇಂಗ್ಲಿಷ್ ಶಿಕ್ಷಣ ಪಡೆಯುವುದು ಅನಿವಾರ್ಯ. ಹೀಗಾಗಿ ಇಂಗ್ಲಿಷ್ ಶಿಕ್ಷಣದ ಕುರಿತು ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.
ಅಂತೆಯೇ ಸರ್ಕಾರದ ನಿರ್ಧಾರಕ್ಕೆ ವ್ಯಕ್ತವಾಗುತ್ತಿರುವ ವಿರೋಧಗಳ ಕುರಿತು ತೀಕ್ಷ್ಣವಾಗಿ ಮಾತನಾಡಿದ ಅವರು, ವಿಪಕ್ಷಗಳ ನಿಲುವು ಅವರ ವೈಯುಕ್ತಿಕ ಅಭಿಪ್ರಾಯವಷ್ಟೇ.. ಎಂದು ಮಾರ್ಮಿಕವಾಗಿ ಹೇಳಿದರು.