ವಶಪಡಿಸಿಕೊಳ್ಳಲಾದ ಬೆಳ್ಳಿ ದೀಪಗಳು
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ 15 ಲಕ್ಷ ರೂ.ಗೂ ಅಧಿಕ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಕೆಎಸ್ ಆರ್ ಟಿಸಿ ಸಂಸ್ಛೆ ಅಮಾನತು ಮಾಡಿದೆ.
ಬೆಂಗಳೂರು- ವಿಜಯವಾಡ ಮಾರ್ಗದಲ್ಲಿ ಸಾಗುತ್ತಿದ್ದ ಕೆಎಸ್ಆರ್ಟಿಸಿ ಐರಾವತ ಕ್ಲಬ್ ಕ್ಲಾಸ್ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ. 15 ಲಕ್ಷ ಮೌಲ್ಯದ ಬೆಳ್ಳಿ ದೀಪಗಳನ್ನು ಹೊಸಕೋಟೆ ಟೋಲ್ ಬಳಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಸ್ ಸಂಖ್ಯೆ ಕೆಎ 57 ಎಫ್ 2844 ಬಸ್ ನಲ್ಲಿ ಬೆಳ್ಳಿ ವಸ್ತುಗಳನ್ನು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿಯನ್ನು ಆಧರಿಸಿ ಬೆಂಗಳೂರು ಕೇಂದ್ರ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಭಾಕರ್ ರೆಡ್ಡಿ ನೇತೃತ್ವದಲ್ಲಿ ಬಸ್ ಅನ್ನು ತಡೆದು ಪರಿಶೀಲನೆ ನಡಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಯಾವುದೇ ದಾಖಲೆಗಳಿಲ್ಲದೆ ಐರಾವತ ಕ್ಲಬ್ ಕ್ಲಾಸ್ ಬಸ್ನಲ್ಲಿ 4 ಬ್ಯಾಗ್ಗಳಲ್ಲಿ ಸಾಗಾಟ ಮಾಡುತ್ತಿದ್ದ ಬೆಳ್ಳಿ ದೀಪ ಇನ್ನಿತರೆ ಬೆಳ್ಳಿ ವಸ್ತುಗಳ ಮೌಲ್ಯ 15 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ. ಜಪ್ತಿಯಾಗಿರುವ ಬೆಳ್ಳಿ ಸಾಮಗ್ರಿಗಳನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಬೆಳ್ಳಿ ವಸ್ತುಗಳನ್ನು ಆಂಧ್ರಪ್ರದೇಶಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಬಸ್ ನ ಲಗೇಜ್ ಬಾಕ್ಸ್ ನಲ್ಲಿಟ್ಟುಕೊಂಡು ಸಾಗಾಟ ಮಾಡುತ್ತಿದ್ದ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಅಕ್ರಮದಲ್ಲಿ ಶಾಮೀಲಾಗಿದ್ದ ಬಸ್ ಚಾಲಕ, ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಕೆ್ಎಸ್ ಆರ್ ಟಿಸಿ ಸಂಸ್ಥೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos