ಬೆಂಗಳೂರು: ಜಗತ್ತಿನಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತವನ್ನು ಇನ್ನಷ್ಟು ಸಬಲೀಕರಣಗೊಳಿಸಲು ದೇಶದ ಪ್ರತಿಯೊಬ್ಬ ನಾಗರಿಕನೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ರಾಜ್ಯಪಾಲ ವಜೂಬಾಯಿ ವಾಲಾ ಕರೆ ನೀಡಿದ್ದಾರೆ.
ಭಾರತ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ವತಿಯಿಂದ ನಗರದ ಪುರಭವನದಲ್ಲಿಂದು ಏರ್ಪಡಿಸಿದ್ದ "ರಾಷ್ಟ್ರೀಯ ಮತದಾರರ ದಿನ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಕ್ರಿಯೆ ಅತ್ಯಂತ ಮಹತ್ವದ್ದು. ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದು, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ವಿವಿಪ್ಯಾಟ್ ವ್ಯವಸ್ಥೆ ಬಂದ ಮೇಲೆ ಚುನಾವಣೆ ಪ್ರಕ್ರಿಯೆಯ ಮೇಲೆ ಇನ್ನಷ್ಟು ವಿಶ್ವಾಸ ಮೂಡಿದೆ ಎಂದು ಹೇಳಿದರು.
ಚುನಾವಣಾಧಿಕಾರಿಗಳು ನಡೆಸಿದ ನಿರಂತರ ಜಾಗೃತಿಯಿಂದಾಗಿ 5 ಕೋಟಿ ಜನರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ 12 ಲಕ್ಷ ಹೊಸ ಮತದಾರರಿದ್ದಾರೆ. ಇನ್ನು ಕೂಡ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಬ್ಬರು ತಮ್ಮ ಹೆಸರು ಪಟ್ಟಿಯಲ್ಲಿದೆಯೋ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ತಮ್ಮ ಕುಟುಂಬ, ನೆರೆಹೊರೆಯ ನಿವಾಸಿಗಳಿಗೂ ಈ ಬಗ್ಗೆ ಅರಿವು ಮೂಡಿಸಬೇಕು. ಪ್ರತಿ ಪ್ರಜೆಯೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುವಂತೆ ಮಾಡಬೇಕು ಎಂದು ರಾಜ್ಯಪಾಲರು ಹೇಳಿದರು.
ಇತ್ತೀಚೆಗೆ “ನೋಟಾ” ವ್ಯವಸ್ಥೆಯೂ ಜಾರಿಯಲ್ಲಿದೆ. ಆದರೆ ಕಣದಲ್ಲಿರುವ ವ್ಯಕ್ತಿಗಳು ಕಳಂಕಿತರಾದರೆ ಕಡಿಮೆ ಕಳಂಕಿತರನ್ನು ಆಯ್ಕೆ ಮಾಡಬೇಕಾಗುತ್ತದೆ. ರಾಷ್ಟ್ರವನ್ನು ಬಲಿಷ್ಠಗೊಳಿಸಲು ಇದು ಅನಿವಾರ್ಯವಾಗಿದೆ ಎಂದು ಹೇಳಿದರು.
ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ನಾಗಭೂಷಣ್ ಮಾತನಾಡಿ, ಮತದಾನ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿ ಅತ್ಯಂತ ಪ್ರಮುಖವಾದುದು. ಚುನಾವಣೆ ಐದು ವರ್ಷಕ್ಕೊಮ್ಮೆ ನಡೆಯುತ್ತಿದ್ದರೂ ಆಯೋಗ ಪ್ರತಿ ವರ್ಷ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕೆಲಸ ಮಾಡುತ್ತಿದೆ. ಇದುವರೆಗೆ 5.30 ಕೋಟಿ ಮತದಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. “ಯಾವುದೇ ಮತದಾರ ಮತದಾನದಿಂದ ದೂರ ಉಳಿಯಬಾರದು” ಎಂಬುದು ಈ ಬಾರಿಯ ಧ್ಯೇಯವಾಕ್ಯವಾಗಿದೆ ಎಂದು ಹೇಳಿದರು.
ಪ್ರತಿಯೊಬ್ಬ ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಇದಕ್ಕಾಗಿ ಚುನಾವಣಾ ಆಯೋಗ 1950 ಸಹಾಯವಾಣಿ ಸಂಖ್ಯೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ತೆರೆಯಲಾಗಿದೆ. ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದ ಅವರು, ರಾಜ್ಯ ಚುನಾವಣಾ ಆಯೋಗ ಮಾಡಿದ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಪ್ರಶಸ್ತಿ ಸ್ವೀಕರಿಸಲು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ನವದೆಹಲಿಗೆ ಹೋಗಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ “ಮಿಲೇನಿಯಂ ಮತದಾರ”ರಿಗೆ ಎಪಿಕ್ ಕಾರ್ಡ್ ವಿತರಿಸಲಾಯಿತು. ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ರಸಪ್ರಶ್ನೆ ವಿಜೇತರಿಗೆ ಬಹುಮಾನ ನೀಡಲಾಯಿತು. ವಿಶಿಷ್ಟ ಚೇತನರು, ಆದಿವಾಸಿಗಳಿಗೆ ಗುರುತಿನ ಚೀಟಿ ವಿತರಿಸಲಾಯಿತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos