ತುಮಕೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಹಲವು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದ ಕೆ. ಎನ್. ರಾಜಣ್ಣಗೆ ಶಾಕ್ ನೀಡಲಾಗಿದೆ. ತುರ್ತು ಆದೇಶದ ಅನ್ವಯ ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಲಾಗಿದೆ.
ಕಾಂಗ್ರೆಸ್ ಮುಖಂಡ ಕೆ .ಎನ್.ರಾಜಣ್ಣ ಅಧ್ಯಕ್ಷರಾಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಅನ್ನು ಸರ್ಕಾರ ಸೂಪರ್ ಸೀಡ್ ಮಾಡಿ ಆದೇಶ ಹೊರಡಿಸಿದೆ. ಸೂಪರ್ ಸೀಡ್ ಆದ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸರ್ಕಾರದಿಂದ ಒಂದು ವರ್ಷ ಅವಧಿಗಾಗಿ ಬ್ಯಾಂಕಿನ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕೆ. ಎನ್. ರಾಜಣ್ಣ ವಿರುದ್ಧ ರಾಜಕೀಯ ಸೇಡು ತೀರಿಸಿಕೊಂಡರೇ ಎಂಬ ಚರ್ಚೆಗಳು ಆರಂಭವಾಗಿದೆ. ಮೈತ್ರಿ ಸರ್ಕಾರ ಮತ್ತು ದೇವೇಗೌಡರ ಕುಟುಂಬದ ವಿರುದ್ಧ ಹಲವು ಬಾರಿ ರಾಜಣ್ಣ ಅಸಮಾಧಾನ ಹೊರಹಾಕಿದ್ದರು.
2003 ರಿಂದ ಮಾಜಿ ಶಾಸಕ ರಾಜಣ್ಣ ಸತತ 5 ವರ್ಷಗಳ ಡಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಆರ್. ಶ್ರೀನಿವಾಸ ಪ್ರಸಾದ್ ಉಪಾಧ್ಯಕ್ಷರಾಗಿದ್ದರೂ ರಾಜಣ್ಣ ಅವರು ಬ್ಯಾಂಕಿನಲ್ಲಿ ಹಿಡಿತ ಹೊಂದಿದ್ದರು. ಡಿಸಿಸಿ ಬ್ಯಾಂಕ್ ಈ ರೀತಿ ಸೂಪರ್ ಸೀಡ್ ಆಗುವುದು ಇದೇ ಮೊದಲಲ್ಲ. 2004ರಲ್ಲೂ ಸೂಪರ್ ಸೀಡ್ ಆಗಿತ್ತು.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ರಾಜಣ್ಣ, ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ನಾವು ನೆಲಕಚ್ಚಿದ್ದೇವೆ. ಹೀಗಿರುವಾಗ ಸಿಎಂ ಅವರನ್ನು ಸಮರ್ಥಿಸಿಕೊಳ್ಳುವ ನಮ್ಮವರಿಗೆ ಬುದ್ಧಿ ಇಲ್ಲ ಎಂದು ಹೇಳಿ ಕೈ ನಾಯಕರ ವಿರುದ್ಧವೇ ಕಿಡಿಕಾರಿದ್ದರು.
ಶಾಸನ ಸಭೆಯಲ್ಲಿ ಮಾತನಾಡುವುದು ಶಾಸಕರ ಹಕ್ಕು. ಹಾಗಂತ ಸುಖಾಸುಮ್ಮನೆ ಕಾಲ ಹರಣ ಮಾಡಬಾರದು. ಈಗ ಶಾಸಕರು ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಸರ್ಕಾರ ಉಳಿಯಬಾರದು. ಸರ್ಕಾರ ಉರುಳಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos