ರಾಜ್ಯ

ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಇಲ್ಲ: ಕರ್ನಾಟಕ ಸರ್ಕಾರದ ಆದೇಶ

Srinivasamurthy VN
ಬೆಂಗಳೂರು: ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆದೇಶಿಸಿದೆ.
ರಾಜ್ಯದಲ್ಲಿ ಭಾರಿ ಪರ-ವಿರೋಧಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿ ಆಚರಣೆಗೆ ರಾಜ್ಯದ ಬಿಜೆಪಿ ಸರ್ಕಾರ ಬ್ರೇಕ್ ಹಾಕಿದ್ದು, ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆದೇಶಿಸಿದೆ.
ಈ ಹಿಂದಷ್ಟೇ ಬಿಜೆಪಿ ಶಾಸಕ ಕೆಜಿ ಬೋಪಯ್ಯ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಟಿಪ್ಪುಜಯಂತಿ ಆಚರಣೆಯನ್ನ ರದ್ದುಪಡಿಸುವಂತೆ ಕೋರಿದ್ದರು. ಪ್ರತಿ ನವೆಂಬರ್​ 10 ರಂದು ಟಿಪ್ಪು ಜಯಂತಿಯನ್ನ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದೆ. ಆದ್ರೆ ಟಿಪ್ಪು ಜಯಂತಿಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಅದನ್ನ ರದ್ದುಪಡಿಸಬೇಕೆಂದು ಕೋರಿ ಪತ್ರ ಬರೆದಿದ್ದರು. 
ಈ ಪತ್ರಕ್ಕೆ ಸ್ಪಂದಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಇದೀಗ ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿತ್ತು ಎಂದು ಹೇಳಲಾಗಿದೆ.
ಈ ಮೊದಲು ಅಲ್ಪಸಂಖ್ಯಾತರ ಇಲಾಖೆಯಿಂದ ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತಿತ್ತು. ಬಳಿಕ ಅದನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿ 2016 ನೇ ಸಾಲಿನಿಂದ ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಮಂಗಳವಾರ ಜಯಂತಿ ರದ್ದುಗೊಳಿಸಿ ಆದೇಶ ಹೊರಡಿಸಿರುವ ಸರ್ಕಾರ, ಕೆ.ಜಿ.ಬೋಪಯ್ಯ ಅವರ ಮನವಿ ಮೇರೆಗೆ ಜಯಂತಿ ರದ್ದುಗೊಳಿಸಿದ್ದು, ಈ  ಬಗ್ಗೆ ಸೋಮವಾರ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.
SCROLL FOR NEXT