ರಾಜ್ಯ

ಬೆಂಗಳೂರು: ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವು

Lingaraj Badiger
ಬೆಂಗಳೂರು: ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಸ್ತೆ ತಿರುವೊಂದರಲ್ಲಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಮೂವರು ಯುವಕರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ
ಬಾಗಲಗುಂಟೆಯ ಪುನೀತ್ (17) ಹಾಗೂ ಚೇತನ್ (18) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಶ್ರೀಧರ್ ಎಂಬವರನ್ನು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ
ಮೂವರೂ ಮಧುಗಿರಿ ತಾಲೂಕಿನ ತಗ್ಗಿಹಳ್ಳಿ ಮೂಲದವರಾಗಿದ್ದು, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರೆಲ್ಲರೂ ಬಾಗಲಗುಂಟೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.
ಊರಿಗೆ ಹೋಗಿದ್ದ ಈ ಮೂವರು ಒಂದೇ ಬೈಕ್‍ನಲ್ಲಿ ಬಾಗಲಗುಂಟೆಗೆ ರಾತ್ರಿ 11ರ ವೇಳೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಎಡೇಹಳ್ಳಿ ಕ್ರಾಸ್ ಬಳಿ ರಸ್ತೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಇವರ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪುನೀತ್, ಚೇತನ್ ಸ್ಥಳದಲ್ಲಿಯೇ ಮೃತಪಟ್ಟರೆ ಹಿಂಬದಿಯಲ್ಲಿ ಕುಳಿತಿದ್ದ ಶ್ರೀಧರ್ ತಲೆಗೆ ತೀವ್ರವಾಗಿಪೆಟ್ಟು ಬಿದ್ದಿದೆ.
ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದ್ದು, ಆತನನ್ನು ಬಂಧಿಸಿರುವ ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
SCROLL FOR NEXT