ರಾಜ್ಯ

ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಸಿಸಿಬಿಗೆ ವಹಿಸಿದ ರಾಜ್ಯ ಸರ್ಕಾರ

Lingaraj Badiger
ಬೆಂಗಳೂರು: ಹೂಡಿಕೆಯ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚಿಸಿರುವ ಐಎಂಎ ಜ್ಯುವೆಲ್ಲರ್ಸ್ ಮಾಲೀಕನ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣವನ್ನು ಸಿಸಿಬಿಗೆ ವಹಿಸುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಐಎಂಎ ವಂಚನೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ ಎಂದು ಹೇಳಿದ್ದಾರೆ.
ಗೃಹ ಸಚಿವರಾದ ಎಂ ಬಿ ಪಾಟೀಲ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು, ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
ಐಎಂಎ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿ ಆಡೀಯೋವೊಂದನ್ನು ಅಜ್ಞಾತಸ್ಥಳದಿಂದ ಕಳುಹಿಸಿ ನಾಪತ್ತೆಯಾಗಿದ್ದಾರೆ. 
ಐಎಂಎ ಸಂಸ್ಥೆ ಚಿನ್ನಾಭರಣ, ಔಷಧ, ರಿಯಲ್ ಎಸ್ಟೇಟ್ ಸೇರಿದಂತೆ ಹಲವು ವ್ಯವಹಾರಗಳನ್ನು ಮಾಡುತ್ತಿದ್ದು, ಇದೀಗ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದ ಸಾವಿರಾರು ಮಂದಿ ಸಂಕಷ್ಟ ಅನುಭವಿಸುವಂತಾಗಿದೆ.
ಇನ್ನು ನಿಗೂಢವಾಗಿ ನಾಪತ್ತೆಯಾಗಿರುವ ಮನ್ಸೂರ್‌ ಖಾನ್‌ ಪತ್ತೆಗಾಗಿ ಪೊಲೀಸರ ನಾಲ್ಕು ತಂಡಗಳನ್ನು ರಚಿಸಲಾಗಿದೆ.
SCROLL FOR NEXT