ಬೆಂಗಳೂರು: ಜಿಂದಾಲ್ ಸ್ಟೀಲ್ ಕಂಪನಿಗೆ ಗುತ್ತಿಗೆ ನೀಡಿದ್ದ 3,667 ಎಕರೆ ಜಮೀನು ಮಾರಾಟ ಪ್ರಕರಣಕ್ಕೆ ತಡೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.
ಈ ಸಂಬಂಧ ಕಡತವನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಹಾಗೂ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಮ್ಮತಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಕೈಗಾರಿಕೆ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ಈ ಬಗ್ಗೆ ಸುಧೀರ್ಘ ಸಮಾಲೋಚನೆ ನಡೆಸಿದರು ಎನ್ನಲಾಗಿದೆ.
ಸಭೆಯ ಬಳಿಕ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಸ್ಟೀಲ್ ಕಂಪನಿಗೆ ಪರಭಾರೆ ಮಾಡುವ ತೀರ್ಮಾನ ಕೈಗೊಂಡಿರುವ ಮೇ 27ರ ಸಚಿವ ಸಂಪುಟ ನಿರ್ಣಯವನ್ನು ಮರು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಸಹಮತಿ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪರಮೇಶ್ವರ್ ಹಾಗೂ ಜಾರ್ಜ್ ಅವರ ಜೊತೆ ಜಿಂದಾಲ್ ಸಂಸ್ಥೆಗೆ ಭೂಮಿ ಪರಬಾರೆ ಬಗ್ಗೆ ಚರ್ಚೆ ನಡೆಸಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ .