ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿ 19 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ಬೆನ್ನಲ್ಲೇ ಇದೀಗ ಆಡಳಿತ ಯಂತ್ರದ ಸುಧಾರಣೆಗಾಗಿ ರಾಜ್ಯ ಸರ್ಕಾರ ಇಂದು ಹತ್ತು ಐಎಎಸ್ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.
ಸರ್ಕಾರಿ ಆಡಳಿತದಲ್ಲಿ ಮಹತ್ವದ ಬದಲಾವಣೆ ಹಾಗೂ ಸುಧಾರಣೆ ಪ್ರಕ್ರಿಯೆಯ ಭಾಗವಾಗಿ ಈ ವರ್ಗಾವನೆ ಮಾಡಲಾಗಿದೆ ಎಂದು ಮೂಲಗಳು ಹೇಳಿದೆ.
ವರ್ಗಾವಣೆ ವಿವರ ಹೀಗಿದೆ- ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಸರ್ಕಾರದ ಹೆಚ್ಚುವರಿ ನಿರ್ದೇಶಕ ಸ್ಥಾನ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿದ್ದ ಮಹೇಂದ್ರ ಜೈನ್ ಅವರಿಗೆ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದ್ದು ಇದರೊಡನೆ ಉನ್ನತ ಶಿಕ್ಷಣ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಹ ನೇಮಕ ಮಾಡಲಾಗಿದೆ.
ಜಲ ಸಂಪನ್ಮೂಲ ಇಲಾಖೆ ಮುಖ್ಯ ಕಾರ್ಯದರ್ಶಿ ಆಗಿದ್ದ ರಾಕೇಶ್ ಸಿಂಗ್ ಅವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ, ಪದವಿ ಪೂರ್ವ ಇಲಾಖೆ ಆಯುಕ್ತರಾಗಿದ್ದ ಎನ್.ಮಂಜುಳಾ ಅವರಿಗೆ ಆ ಸ್ಥಾನದೊಡನೆಯೇ ಬಿಡಿಎ ಯ ಆಯುಕ್ತ ಹುದ್ದೆ ನೀಡಲಾಗಿದೆ.
ಮಂಡ್ಯದ ಮಾಜಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮಾಹಿತಿ, ಜೀವ ವಿಜ್ಞಾನ ತಂತ್ರಜ್ಞಾನ ವಿಭಾಗದ ನಿರ್ದೇಶಕರಾಗಿ ನೇಮಕವಾಗಿದ್ದಾರೆ.ಮಾಹಿತಿ, ಜೀವ ವಿಜ್ಞಾನ ತಂತ್ರಜ್ಞಾನ ವಿಭಾಗದ ನಿರ್ದೇಶಕರಾಗಿದ್ದ ಎಸ್ಎಸ್ ನಕುಲ್ ಅವರಿಗೆ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಬಳ್ಳಾರಿಯ ಜಿಲ್ಲಾಧಿಕಾರಿಯಾಗಿದ್ದ ರಾಮ್ ಪ್ರಶಾಂತ್ ಮನೋಹರ್ ಅವರನ್ನು ಉದ್ಯೋಗ ಮತ್ತು ತರಬೇತಿ ವಿಭಾಗದ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅತಿ ಸಣ್ಣ, ಸಣ್ಣ, ಮಧ್ಯಮ ವ್ಯಾಪಾರ ಇಲಾಖೆ ನಿರ್ದೇಶಕರಾಗಿದ್ದ ವೃಷಬೇಂದ್ರ ಮೂರ್ತಿರೇಷ್ಮೆ ಕೃಷಿ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆಗೊಂಡಿದ್ದಾರೆ. ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಕೆ. ಯಾಲಕ್ಕಿ ಗೌಡ ನೇಮಕವಾಗಿದ್ದಾರೆ.