ಬೆಂಗಳೂರು; ಹೆಬ್ಬಾಳದ ಎಸ್ಟಿಪಿ ದುರಂತ ಸಂಬಂಧ ಈಗಾಗಲೇ ತನಿಖೆ ನಡೆಸಲಾಗುತ್ತಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.
ಹೆಬ್ಬಾಳದ ಎಸ್ಟಿಪಿ ದುರಂತದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಎಸ್ಟಿಪಿ ನಿರ್ಮಾಣದ ಹಂತದ ವೇಳೆ ಮೂರು ಜನ ಎಂಜಿನಿಯರ್ಸ್ ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಅವರ ಆತ್ಮಕ್ಕೆ ಶಾಂತಿ ದೊರೆಯಲಿದೆ. ಅವರ ಕುಟುಂಬ ವರ್ಗಕ್ಕೆ ಇಲಾಖೆಯಿಂದ ಪರಿಹಾರ ನೀಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಈ ಘಟನೆಗೆ ಯಾರು ಹೊಣೆ? ಚೀಫ್ ಇಂಜಿನಿಯರ್ ನೀವು ಆ ಸ್ಥಳದಲ್ಲಿ ಇದ್ದರಾ? ಚೀಫ್ ಇಂಜಿನಿಯರ್ ಆದವರು ಮುಂದಾಳತ್ವ ವಹಿಸಿ ಕೆಲಸ ಮಾಡಿಸಬೇಕು. ನೀವೆ ಹೋಗಿಲ್ಲ ಅಂದರೆ ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತೀರಾ? ಇಲಾಖೆಗೆ ಒಳ್ಳೆಯ ಹೆಸರು ಇದೆ.
ಇಂಥ ಘಟನೆಯಿಂದ ಮುಂದೆ ಕಾಮಗಾರಿಗೆ ಯಾರು ಬರುತ್ತಾರೆ? ಇಲಾಖೆ ಸರಿಯಾಗಿ ನಿರ್ವಹಣೆ ಮಾಡುವುದಿಲ್ಲ ಎಂಬ ಕೆಟ್ಟ ಹೆಸರು ಇಲಾಖೆಗೆ ಬರುವುದಿಲ್ಲವೇ? ಈ ಘಟನೆಗೆ ಕಾರಣರ್ಯಾರೆ ಆಗಲಿ ಕಠಿಣ ಕ್ರಮ ಆಗಬೇಕು. ಇಲಾಖೆಯಲ್ಲಿ ಇಂಥ ಬೇಜವಾಬ್ದಾರಿ ಯನ್ನು ಎಂದೂ ಸಹಿಸಲ್ಲ ಎಂದು ಗರಂ ಆದರು.
ಹೆಬ್ಬಾಳದಲ್ಲಿ ನಿರ್ಮಾಣವಾಗುತ್ತಿರುವ ಎಸ್ಟಿಪಿ ಎರಡನೇ ಅತಿ ದೊಡ್ಡ ಎಸ್ಟಿಪಿ ಆಗಿದೆ. ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಎಲ್ಲಾ ರೀತಿಯ ನಿರ್ದೇಶನ ನೀಡಲಾಗಿತ್ತು. ಈ ಅವಧಿಯಲ್ಲಿ ಇಂಥ ಘಟನೆ ನಡೆದಿದ್ದು ಬೇಸರ ತರಿಸಿದೆ. ಈ ಘಟನೆಗೆ ಏನು ದೋಷವಾಗಿದೆ ಎಂಬುದು ತನಿಖೆಯಿಂದಲೇ ಸತ್ಯ ತಿಳಿಯಲು ಸಾಧ್ಯ. ತನಿಖೆಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ ಹಾಗೂ ಕೇಂದ್ರದ ಇಲಾಖೆಯಿಂದಲೂ ತಾಂತ್ರಿಕ ದೋಷದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಇದರ ಜೊತೆಗೆ ಇಲಾಖೆಯಿಂದಲೂ ಸಹ ತನಿಖೆಗೆ ಸೂಚಿಸಲಾಗಿದೆ. ಆ ದಿನ ಯಾರೆಲ್ಲಾ ಅಧಿಕಾರಿಗಳು ಸ್ಥಳದಲ್ಲಿ ಇದ್ದರೂ, ಯಾಕೆ ಮುಂಜಾಗೃತಿ ತೆಗೆದುಕೊಂಡಿಲ್ಲ , ಈ ಬೇಜವಾಬ್ದಾರಿಗೆ ಯಾರು ಹೊಣೆ ಈ ಎಲ್ಲಾ ಅಂಶಗಳನ್ನು ಸಹ ಇಲಾಖೆ ಒಳಗೆ ತನಿಖೆ ಮಾಡಲಾಗುವುದು ಎಂದು ಹೇಳಿದರು.
ಬೆಳ್ಳಂದೂರು ಬಳಿ ಇರುವ ಎಸ್ಟಿಪಿಯಿಂದ ನೀರು ಶುದ್ದೀಕರಿಸಲಾಗುತ್ತಿದೆ. ಅದೇ ಮಾದರಿಯಲ್ಲಿ ಹೆಬ್ಬಾಳದಲ್ಲಿಯೂ ಮಾಡಲಾಗುತ್ತಿದ್ದು, ಇದಕ್ಕಾಗಿ 365 ಕೋಟಿ ರುಪಾಯಿ ವೆಚ್ಚ ಮಾಡಲಾಗುತ್ತಿದೆ. ಇನ್ನು ಸಾಕಷ್ಟು ಕಾಮಗಾರಿ ಪೂರತಣಗೊಳ್ಳುವುದು ಬಾಕಿ ಇದ್ದು, ಈ ಎಲ್ಲವೂ ಅತಿ ಎಚ್ಚರಿಕೆಯಿಂದ ಮಾಡಲು ಸೂಚಿಸಿರುವುದಾಗಿ ಡಾ ಜಿ ಪರಮೇಶ್ವರ್ ಹೇಳಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos