ರಾಜ್ಯ

ನಾನು ಪ್ರತಿ ತಿಂಗಳು 2 ರಿಂದ 4 ಬಾರಿ ಗ್ರಾಮ ವಾಸ್ತವ್ಯ ಮಾಡಬಯಸಿದ್ದೇನೆ: ಸಿಎಂ ಕುಮಾರಸ್ವಾಮಿ

Sumana Upadhyaya
ಚಂಡ್ರಕಿ(ಯಾದಗಿರಿ): ಪ್ರತಿ ತಿಂಗಳು ಎರಡರಿಂದ ನಾಲ್ಕು ಬಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಬಯಸಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡ್ರಕಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಜನತಾ ದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಯಾದಗಿರಿಯಿಂದ ಬಸ್ ಮೂಲಕ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ ಅವರು, ಗ್ರಾಮ ವಾಸ್ತವ್ಯದ ಹಿಂದೆ ಯಾವುದೇ ಪ್ರಚಾರ, ಗಿಮಿಕ್ ಇಲ್ಲ,ಗ್ರಾಮೀಣ ಪ್ರದೇಶಗಳಲ್ಲಿನ ಜನರ ವಾಸ್ತವ ಬದುಕನ್ನು ಅರ್ಥ ಮಾಡಿಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸಲು ಮುಂದಾಗುತ್ತೇನೆ ಎಂದರು.
ಚಂಡರಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜನತಾ ದರ್ಶನದ ನಂತರ ಮುಖ್ಯಮಂತ್ರಿಗಳು ಚಂಡರಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಮುಖ್ಯಮಂತ್ರಿಗಳು ದಾರಿಯುದ್ದಕ್ಕೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಸಚಿವರಾದ ವೆಂಕಟರಾವ ನಾಡಗೌಡ, ಶಾಸಕರುಗಳಾದ ನಾಗನಗೌಡ ಕಂದಕೂರ, ಶರಣಬಸಪ್ಪ ದರ್ಶನಾಪೂರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೋನರೆಡ್ಡಿ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ. ಜಿಲ್ಲಾಧಿಕಾರಿ ಕೂರ್ಮರಾ ಉಪಸ್ಥಿತರಿದ್ದರು.
SCROLL FOR NEXT