ಬೆಂಗಳೂರು: ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನೌಷಧ ಮಳಿಗೆಗಳನ್ನು ತೆರೆಯುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಹೇಳಿದ್ದಾರೆ.
ಬಡವರು ಮತ್ತು ಜನಸಾಮಾನ್ಯರಿಗೆ ಮಾರುಕಟ್ಟೆಗಿಂತ ಕಡಿಮೆ ಬೆಲೆಯಲ್ಲಿ ಉತ್ತಮ ದರ್ಜೆಯ ಔಷಧಿಗಳು ದೊರೆಯುವ ಜನೌಷಧ ಕೇಂದ್ರಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆರೆಯಲು ಆದ್ಯತೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಾಗಲಗುಂಟೆಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತಿ ಹಿಂದುಳಿದ ಪ್ರದೇಶಗಳಲ್ಲಿ ಹೆಚ್ಚಿನ ಜನೌಷಧಿ ಕೇಂದ್ರಗಳನ್ನು ತೆರೆಯಬೇಕೆಂಬ ಉದ್ದೇಶ ಸರ್ಕಾರದ್ದಾಗಿದ್ದು, 300 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು, ಪ್ರತ್ಯೇಕ ಉಗ್ರಾಣಗಳನ್ನು ತೆರೆಯಲಾಗುವುದು ಎಂದರು.
ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಆರೋಗ್ಯ ಸೇವೆ, ಗುಣಮಟ್ಟದ ಔಷಧಿಗಳು ದೊರೆಯಬೇಕು ಎನ್ನುವುದು ಈ ಯೋಜನೆಯ ಉದ್ದೇಶವಾಗಿದೆ. ಈಗಾಗಲೇ ಹಲವೆಡೆ ಜನೌಷಧಿ ಕೇಂದ್ರಗಳಿಂದ ಸಾಕಷ್ಟು ಬಡರೋಗಿಗಳಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಸದಾನಂದಗೌಡ ಹೇಳಿದರು.