ರಾಜ್ಯ

ಜಿಂದಾಲ್ ಭೂ ವಿವಾದ: ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

Lingaraj Badiger
ಬೆಂಗಳೂರು: ಜಿಂದಾಲ್ ಕಂಪನಿಗೆ ಸರ್ಕಾರಿ ಭೂಮಿ ಮಾರಾಟ ವಿವಾದವನ್ನು ಇತ್ಯರ್ಥಪಡಿಸಲು ರಾಜ್ಯ ಸರ್ಕಾರ, ಗೃಹ ಸಚಿವ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಿದೆ.
ಈ ಉಪಸಮಿತಿಯಲ್ಲಿ ಸಚಿವರಾದ ಬಂಡೆಪ್ಪ ಖಾಶಂಪೂರ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಸದಸ್ಯರಾಗಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ 3,66,7.31 ಎಕರೆ ಭೂಮಿಯನ್ನು ಮೆ||ಜೆ.ಎಸ್.ಡಬ್ಲ್ಯೂ ಸ್ಟೀಲ್ ಲಿ. ಸಂಸ್ಥೆಯ ಪರವಾಗಿ ಶುದ್ಧ ಕ್ರಯ ಪತ್ರಗಳನ್ನು ಜಾರಿಗೊಳಿಸುವ ಪ್ರಸ್ತಾವನೆ ಕುರಿತು ಪರಿಶೀಲಿಸಲು ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಗತ್ಯ ಸಹಕಾರ ನೀಡುವಂತೆ ಸೂಚಿಸಲಾಗಿದೆ.
ಭೂಮಿ ಮಾರಾಟ ಸಂಬಂಧ ಅಧ್ಯಯನ ನಡೆಸಿ ಸರ್ಕಾರಕ್ಕೆ ಉಪಸಮಿತಿ ವರದಿ ಸಲ್ಲಿಸಲಿದೆ.
ಜಿಂದಾಲ್ ಗೆ ಭೂ ಮಾರಾಟವನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡ ಹೆಚ್.ಕೆ.ಪಾಟೀಲ್ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಎರಡು ಪತ್ರಗಳನ್ನು ಬರೆದು, ಸರ್ಕಾರದ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯಿಸಿದ್ದರು. ಅಲ್ಲದೇ ಜಿಂದಾಲ್‌ಗೆ ಭೂಮಿ ನೀಡುವುದನ್ನು ವಿರೋಧಿಸಿ ಯಡಿಯೂರಪ್ಪ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಕೂಡ ನಡೆದಿತ್ತು.
ಭೂಮಿ ಪರಭಾರೆ ಮಾಡುವ ತೀರ್ಮಾನ ಕೈಬಿಡಲು ಹಿಂದೇಟು ಹಾಕಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ, ಈ ಸಂಬಂಧದ ನಿರ್ಣಯ ಪುನರ್‌ಪರಿಶೀಲನೆಗೆ ಸಚಿವ ಸಂಪುಟ ಉಪ ಸಮಿತಿ ರಚಿಸಲು ನಿರ್ಧರಿಸಿತ್ತು.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ‍್ವರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚನೆಯಾಗಲಿದೆ ಎನ್ನಲಾಗಿತ್ತು. ಆದರೆ ಸಂಪುಟ ಸಮಿತಿಯಲ್ಲಿ ಪರಮೇಶ್ವರ್ ಅವರಿಗೆ ಸ್ಥಾನ ಕಲ್ಪಿಸಿಲ್ಲ.
SCROLL FOR NEXT