ಬೆಂಗಳೂರು: ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಮೃತ್ಯುಕೂಪವಾಗುತ್ತಿದ್ದ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಈವರೆಗೂ ಸುಮಾರು 56 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 9 ಜನರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು ಇನ್ನು ಸಾವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ.
ಬೆಳಗ್ಗೆ ಕಾರ್ಯಾಚರಣೆ ವೇಳೆ ಅಜ್ಜಿ ಮೊಮ್ಮಗುವಿನ ಶವ ಪತ್ತೆಯಾಗಿದೆ. ಇದೇ ವೇಳೆ ಎನ್ಡಿಆರ್ಎಫ್ ತಂಡ ಇಬ್ಬರನ್ನು ರಕ್ಷಣೆ ಮಾಡಿದೆ.
ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿತ್ತು. ಅವಶೇಷಗಳಡಿ ಇನ್ನೂ 12 ಜನರು ಸಿಲುಕಿರುವ ಸಾಧ್ಯತೆಗಳಿವೆ ಎಂದು ಡಿಜಿಪಿ, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ವಿಭಾಗದ ಮುಖ್ಯಸ್ಥರಾಗಿರುವ ಎಂಎನ್ ರೆಡ್ಡಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂಎನ್ ನಾಗರಾಜ್ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ನಾವು ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಹೆಚ್ಚು ಗಮನಹರಿಸುತ್ತಿದ್ದೇವೆ. ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ನಡೆಯುತ್ತಿದೆ. ಎನ್ ಡಿಆರ್ ಎಫ್ ನ 2 ಹೆಚ್ಚುವರಿ ತಂಡಗಳನ್ನು ಕರೆಸಲಾಗಿದೆ. 150 ಪೊಲೀಸ್ ಸಿಬ್ಬಂದಿಗಳು, ಅಗ್ನಿಶಾಮಕ, ತುರ್ತು ಪರಿಸ್ಥಿತಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.