ಧಾರವಾಡ: ಧಾರವಾಡ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಪ್ರಕರಣ ಸಂಬಂಧ ಒಟ್ಟು 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಇನ್ನು ಇದುವರೆಗಿನ ರಕ್ಷಣಾ ಕಾರ್ಯಾಚರಣೆಯಲ್ಲಿ 60ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂಜದ ಸಾಗಿದೆ. ಎನ್ಡಿಆರ್ಎಫ್, ಅಗ್ನಿಶಾಮಕ ದಳ, ತಜ್ಞರು ಐದನೇ ದಿನವಾದ ಇಂದು ಕೂಡ ರಕ್ಷಣೆ ಮತ್ತು ಪರಿಹಾರ ಕಾರ್ಯ ಮುಂದುವರಿಸಿದ್ದಾರೆ.
ಅಂತೆಯೇ ಘಟನೆಗೆ ಸಂಬಂಧಿಸಿ ಸ್ಥಳೀಯ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಜರುಗಿಸಿದೆ. ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯದ ಆರೋಪದ ಮೇರೆಗೆ ಒಟ್ಟು 7 ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ 3ರ ಸಹಾಯಕ ಆಯುಕ್ತರಾದ ಸಂತೋಷ್ ಅನಿಶೆಟ್ಟರ್, ನಗರ ಯೋಜನೆ ಸಹಾಯಕ ನಿರ್ದೇಶಕ ಅಶೋಕ್ ಗದಗ್, ಪಟ್ಟಣ ಯೋಜನೆ ಅಧಿಕಾರಿ ಮುಕುಂದ್ ಜೋಷಿ, ಕಾರ್ಯನಿರ್ವಾಹಕ ಇಂಜಿನಿಯರ್ ವಿ.ಶ್ರೀಧರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಪ್ಪ ನಾಗರ, ಯೋಜನಾ ಇಲಾಖೆಯ ಹೆಚ್ಚುವರಿ ನಿರ್ದೇಶಕ ಬಿ.ವಿ.ಹಿರೇಮಠ್ ಅವರನ್ನು ಅಮಾನತು ಮಾಡಲಾಗಿದ್ದು, ವಿಚಾರಣೆ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 19ರಂದು ಈ ದುರಂತ ಸಂಭವಿಸಿತ್ತು. ಕಟ್ಟಡದ ಒಳಗೆ ಸಿಲುಕಿಕೊಂಡಿದ್ದ 24 ವರ್ಷ ಪ್ರಾಯದ ಸಂಗನಗೌಡ ರಾಮೇಗೌಡರ್ ಅವರನ್ನು 66 ಗಂಟೆಗಳ ಬಳಿಕ ನಿನ್ನೆ ರಕ್ಷಿಸಲಾಗಿತ್ತು. ಸ್ಥಳದಲ್ಲಿ ರಕ್ಷಣಾ ಕಾರ್ಯ ಈಗಲೂ ಮುಂದುವರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.