ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಪತ್ರಕರ್ತ ಹೇಮಂತ್ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ವಿಚಾರಣಾ ನ್ಯಾಯಾಲಯ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು, 50 ಸಾವಿರ ರೂ. ಮೊತ್ತದ ವೈಯಕ್ತಿಕ ಬಾಂಡ್, 50 ಸಾವಿರ ರೂ. ಮೊತ್ತದ ಶ್ಯೂರಿಟಿ ಸಲ್ಲಿಸುವಂತೆ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಹೇಮಂತ್ ಕುಮಾರ್ ಅವರು ತಮ್ಮ ಹೆಸರಿನಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನಕಲಿ ಪತ್ರ ಬರೆದಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಎಂ.ಬಿ.ಪಾಟೀಲ್ ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಸಂಬಂಧ ಪೊಲೀಸರು 'ಪೋಸ್ಟ್ ಕಾರ್ಡ್' ವೆಬ್ ಪೋರ್ಟಲ್ ಸಂಪಾದಕ ವಿಕ್ರಂ ಹೆಗ್ಡೆ ಅವರನ್ನು ಬಂಧಿಸಿದ್ದರು. ಅವರ ವಿಚಾರಣೆ ವೇಳೆ ದೊರೆತ ಮಾಹಿತಿ ಆಧರಿಸಿ, ಪತ್ರಕರ್ತ ಹೇಮಂತ್ ಕುಮಾರ್ ಅನ್ನು ಬಂಧಿಸಿದ್ದರು. ನ್ಯಾಯಾಲಯ ಹೇಮಂತ್ ಅವರನ್ನು ಏ.30ರವರೆಗೆ ಪೊಲೀಸ್ ಕಸ್ಟಡಿಗೆ ಹಾಗೂ ನಂತರ, ಮೇ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.