ರಾಜ್ಯ

ಮಂಗಳೂರು: ಬಂಧಿಸಲು ಹೋದ ಪೊಲೀಸರ ಮೇಲೆ ಚಾಕು ಇರಿದ ರೌಡಿ; ಶೂಟೌಟ್ ಮಾಡಿ ಬಂಧಿಸಿದ ಪೊಲೀಸರು

Raghavendra Adiga
ಮಂಗಳೂರು: ಕುಖ್ಯಾತ ರೌಡಿ ಗೌರೀಶ್ ಎಂಬಾತನನ್ನು ಬಂಧಿಸಲು ಹೋದ ಪೊಲೀಸ್ ಅಧಿಕಾರಿಗಳ ಮೇಲೆ ಆತ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರೌಡಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ಗುರುವಾರ ರಾತ್ರಿ ನಗರದಲ್ಲಿ ನಡೆದಿದೆ.

ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ನಗರ ಪೋಲಿಸ್ ಆಯುಕ್ತ ಸಂದೀಪ್ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡಿ, ರೌಡಿಶೀಟರ್ ಗೌರೀಶ್ ವಿರುದ್ಧ ಮಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ರೌಡಿಶೀಟರ್ ನನ್ನು ಬಂಧಿಸಲು ಬಲೆಬೀಸಿದ್ದರು. ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ತಂಡದಲ್ಲಿನ ಪೇದೆ ಶೀನಪ್ಪ ಎಂಬವರಿಗೆ ಆರೋಪಿ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಜಾಗೃತರಾದ ಎಸ್ ಐ ಕಬ್ಬಾಳ್ ರಾಜ್ ಅವರು ತಮ್ಮ ಪ್ರಾಣರಕ್ಷಣೆಗಾಗಿ ರೌಡಿಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ರೌಡಿಶೀಟರ್ ವಿರುದ್ಧ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು ಆರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮೂರು ಕೊಲೆ ಆರೋಪ ಪ್ರಕರಣಗಳಿವೆ. ಈತನಿಗಾಗಿ ಪೊಲೀಸರು ಹುಡುಕಾಡುತ್ತಿದ್ದರು ಎಂದು ಅವರು ತಿಳಿಸಿದರು.
SCROLL FOR NEXT