ಬರ ಪರಿಸ್ಥಿತಿ: ಗ್ರಾಮಗಳಿಗೆ ಕಡ್ಡಾಯ ಭೇಟಿ ನೀಡಲು ಜಿಲ್ಲಾಧಿಕಾರಿ, ಜಿ.ಪಂ ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ
ಬೆಂಗಳೂರು: ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಕಡ್ಡಾಯವಾಗಿ ಪ್ರತಿ ದಿನ ಗ್ರಾಮಗಳಿಗೆ ಭೇಟಿ ನೀಡಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಅವರು, ಸಮಸ್ಯೆ ಇರುವ ಗ್ರಾಮಗಳಲ್ಲಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ತೀರ್ಮಾನ ಕೈಗೊಳ್ಳಲು ಅಧಿಕಾರ ನೀಡಲಾಗಿದೆ. ಕುಡಿಯುವ ನೀರು ಸರಬರಾಜು ಮತ್ತು ಮೇವಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರವಹಿಸಬೆಕು. ಮೇವು ಸಂಗ್ರಹಕ್ಕೆ ಮುಂಚಿತವಾಗಿಯೇ ಸಿದ್ಧತೆ ನಡೆಸುವಂತೆ ಈ ಹಿಂದೆಯೇ ಸೂಚಿಸಲಾಗಿತ್ತು. ಎಲ್ಲಿಯೂ ಲೋಪವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕರ್ಗಳಿಗೆ ಏಪ್ರಿಲ್ ತಿಂಗಳ ವರೆಗಿನ ಬಾಕಿ ಬಿಲ್ ಹಣವನ್ನು ವಾರದೊಳಗೆ ಪಾವತಿಸಬೇಕು. ಇನ್ನು ಮುಂದೆ ಪ್ರತಿ 15 ದಿನಗಳಿಗೊಮ್ಮೆ ಬಿಲ್ ಪಾವತಿಸಬೇಕು. ಅವಧಿ ಮುಗಿದ ನಂತರ ಬಿಲ್ ಸಲ್ಲಿಸಿದರೆ ಆಯಾ ಪಿಡಿಒ, ಇಓ ಗಳೇ ಹೊಣೆಗಾರರು. ಅವರ ವಿರುದ್ಧ ಕ್ರಮ ಕೈಗೊಳುವಂತೆ ಕುಮಾರ ಸ್ವಾಮಿ ಸೂಚಿಸಿದರು.
ಕುಡಿಯುವ ನೀರಿನ ಟ್ಯಾಂಕರ್ಗಳಿಗೆ ಜಿ.ಪಿ.ಎಸ್ ಅಳವಡಿಕೆ ಕಾರ್ಯವನ್ನು ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಳಿಸಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಜಿ.ಪಿ.ಎಸ್ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಹಣ ಸೋರಿಕೆಯಾಗುವುದನ್ನು ಅಧಿಕಾರಿಗಳು ತಡೆಗಟ್ಟಬೇಕು ಎಂದರು.
ರಾಜ್ಯದಲ್ಲಿ ಒಟ್ಟು 1873 ಕೊಳವೆಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆಯಲಾಗಿದೆ. ಇನ್ನೂ ಹೆಚ್ಚಿನ ಶ್ರಮವಹಿಸಿ ನೀರು ಹೆಚ್ಚಿರುವ ಕೊಳವೆಬಾವಿಗಳನ್ನು ಬಾಡಿಗೆ ಪಡೆಯಲು ಕ್ರಮ ಕೈಗೊಳ್ಳಿ. ಅಂತರ್ಜಲ ಸಾರ್ವಜನಿಕರ ಸ್ವತ್ತು. ಹೀಗಾಗಿ ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿಗಳನ್ನು ವಶಕ್ಕೆ ಪಡೆಯಲು ಸಹ ಅಧಿಕಾರಿಗಳು ಹಿಂಜರಿಯಬಾರದು ಎಂದರು.
ಹೊಸದಾಗಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದ ಗ್ರಾಮಗಳಿಗೆ 24 ಗಂಟೆಗಳ ಒಳಗೆ ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಎಲ್ಲಾ ಜಿಲ್ಲೆಗಳಲ್ಲಿ ವಾರದ ಏಳು ದಿನ, ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಇವುಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳು ಮುಖ್ಯಮಂತ್ರಿಗಳು ತಿಳಿಸಿದರು.
ಪ್ರತಿ ವ್ಯಕ್ತಿಗೆ ಕನಿಷ್ಠ 40 ಎಲ್.ಪಿ.ಸಿ.ಡಿ ನೀರು ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು. ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಿ ಹೆಚ್ಚಿನ ಜವಾಬ್ದಾರಿಯನ್ನು ವಹಿಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣಬೈರೇಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರಮುಖ್ಯ ಕಾರ್ಯದರ್ಶಿ ಡಾ: ಇ.ವಿ.ರಮಣರೆಡ್ಡಿ ,ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತಿತರ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos