ಶಿವಮೊಗ್ಗ: ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ಆಗುಂಬೆ ಘಾಟ್ ರಸ್ತೆಯಲ್ಲಿ ಇಂದಿನಿಂದ ವಾಹನ ಸಂಚಾರ ಆರಂಭವಾಗಲಿದೆ.
ಏಪ್ರಿಲ್ 1ರಿಂದ ರಸ್ತೆ ದುರಸ್ತಿಗಾಗಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಮೇ 16ರಿಂದ ದ್ವಿಚಕ್ರ ವಾಹನ, ಕಾರು ಮತ್ತು ಮಿನಿ ಬಸ್ಗಳು ಘಾಟ್ ರಸ್ತೆಯಲ್ಲಿ ಸಂಚಾರ ನಡೆಸಬಹುದಾಗಿದೆ. ಭಾರಿ ಸರಕು ಸಾಗಣೆ ವಾಹನಗಳಿಗೆ ಮಾತ್ರ ಪ್ರವೇಶವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕಾಂಕ್ರಿಟ್ ಕಾಮಗಾರಿ ಕ್ಯೂರಿಂಗ್ ಹಂತದಲ್ಲಿರುವುದರಿಂದ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಆಗುಂಬೆ ಘಾಟ್ ವಾಹನಗಳಿಗೆ ಬಂದ್ ತಾತ್ಕಾಲಿಕವಾಗಿ ವಾಹನಗಳಿಗೆ ತೊಂದರೆ ಆಗದಂತೆ ರಸ್ತೆಯ ಸುತ್ತಲೂ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. 7ನೇ ತಿರುವಿನಲ್ಲಿ ಸೇರಿದಂತೆ ಹಲವು ಕಡೆ ತುರ್ತು ಕಾಮಗಾರಿಗೆ ಅವಕಾಶ ನೀಡುವಂತೆ ಕೋರಿ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಪತ್ರ ಬರೆಯಲಾಗಿದೆ.
2018ರ ಜುಲೈ 10 ಮತ್ತು 13ರಂದು ಸುರಿದ ಮಳೆಯಿಂದಾಗಿ ಆಗುಂಬೆ ಘಾಟ್ ರಸ್ತೆಯ 7 ಮತ್ತು 14ನೇ ತಿರುವಿನಲ್ಲಿ ಹಾಗೂ ಆನೆ ಬಂಡೆ ಬಳಿ ಗುಡ್ಡ ಕುಸಿತ ಉಂಟಾಗಿತ್ತು. ಈ ಭಾಗದಲ್ಲಿ ಶಾಶ್ವತ ದುರಸ್ತಿ ಕಾಮಗಾರಿಯನ್ನು ನಡೆಸಲು ಘಾಟ್ ರಸ್ತೆ ಬಂದ್ ಮಾಡಲಾಗಿತ್ತು. ಏಪ್ರಿಲ್ 1 ರಿಂದ ಆಗುಂಬೆ ಘಾಟ್ನಲ್ಲಿ ವಾಹನ ಸಂಚಾರ ಬಂದ್ ಆಗಿತ್ತು.