ಬೆಂಗಳೂರು: ತಮಿಳುನಾಡಿಗೆ ಕುಡಿಯುವ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ನೀಡಿದ ಸೂಚನೆ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಪ್ರಾಧಿಕಾರದ ಸೂಚನೆಗೆ ಗೌರವ ಕೊಟ್ಟು ನೀರಿನ ಒಳಹರಿವು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸೋಮವಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಕಾವೇರಿ ಕಣಿವೆ ರಾಜ್ಯಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ, ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ ಸುರಿದು ಕರ್ನಾಟಕದ ಜಲಾಶಯಗಳಿಗೆ ಒಳಹರಿವು ಬಂದರೆ ತಮಿಳುನಾಡಿಗೆ 9.19 ಟಿಎಂಸಿ ಅಡಿ ನೀರು ಹರಿಸುವಂತೆ ಸೂಚನೆ ನೀಡಿದ್ದಾರೆ.
ಪ್ರಾಧಿಕಾರದ ಸೂಚನೆ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ತಮಿಳುನಾಡಿಗೆ ನೀರು ಹರಿಸಲು ತಕರಾರು ಇಲ್ಲ. ಮುಂಗಾರಿನಲ್ಲಿ ಒಳಹರಿವು ಹೆಚ್ಚಾಗುವ ವಿಶ್ವಾಸವಿದೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನೀರಿನ ಕೊರತೆ ಉಂಟಾದರೆ ಸರ್ವಪಕ್ಷಗಳ ಸಭೆ ನಡೆಸಿ ನೀರು ಹರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ರಾಜ್ಯ ಹಾಗೂ ನ್ಯಾಯಾಲಯದ ಹಿತ ಎರಡನ್ನೂ ಪರಿಗಣಿಸಲಾಗುವುದು ಎಂದರು.
ಈಗಷ್ಟೇ ಕೇಂದ್ರದಲ್ಲಿ ಎನ್ಡಿಎ ಸರ್ಕಾರ ರಚನೆಯಾಗುತ್ತಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಪ್ರಾಧಿಕಾರ ನೀಡಿದ ಸೂಚನೆ ಕುರಿತು ಬಿಜೆಪಿ ಸಂಸದರ ಧ್ವನಿ ಶಕ್ತಿ ಹೇಗಿದೆ? ಸಂಸತ್ತಿನಲ್ಲಿ ಅವರು ಹೇಗೆ ಮಾತನಾಡುತ್ತಾರೆ ಎನ್ನುವುದನ್ನು ಕಾದು ನೋಡೋಣ ಎಂದು ಡಿ.ಕೆ.ಶಿವಕುಮಾರ್ ಒತ್ತಿ ಹೇಳಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos