ಪ್ರಿಯಾಂಕಾ ಮೇರಿ ಫ್ರಾನ್ಸಿಸ್
ಹಾಸನ: ಲೋಕಸಭೆ ಚುನಾವಣೆ ಮುಗಿದು ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ ತೆಗೆದುಹಾಕಿದ ಕೇವಲ ಮೂರೇ ದಿನಗಳಲ್ಲಿ ರಾಜ್ಯ ಸರ್ಕಾರ ಗುರುವಾರ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ವರ್ಗಾವಣೆ ಮಾಡಿದೆ.
ಹಾಸನ ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಕ್ರಂ ಪಾಷಾ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಂ ಪಾಷಾ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಆಗ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಹಾನಸ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ಈ ಹಿಂದೆ ಬೆಂಗಳೂರು ಪ್ರವಾಸೋದ್ಯಮ ಇಲಾಖೆಯಲ್ಲಿ ನಿರ್ದೇಶಕರಾಗಿ ಪ್ರಿಯಾಂಕಾ ಮೇರಿ ಕಾರ್ಯನಿರ್ವಹಿಸಿದ್ದರು.
ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಕಾರ್ಯನಿರ್ವಹಿಸಿ ಜನಪ್ರಿಯತೆ ಗಳಿಸಿದ್ದರು. ಆದರೆ ಚುನಾವಣಾ ಮಾರ್ಗಸೂಚಿ ಪಾಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿತ್ತು. ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಬಳಿಕ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಜಿಲ್ಲಾಧಿಕಾರಿ ಸ್ಥಾನಕ್ಕೆ ಅಕ್ರಂ ಪಾಷಾ ಅವರನ್ನು ನೇಮಿಸಲಾಗಿತ್ತು. ಅಕ್ರಂಪಾಷಾ ಅವರು ಫೆಬ್ರವರಿ 22 ರಂದು ಹಾಸನಕ್ಕೆ ವರ್ಗಗೊಂಡು ಆಗಮಿಸಿದ್ದರು. ಆದರೆ ಒಂದು ತಿಂಗಳ ಅವಧಿಯಲ್ಲೇ ಪಾಷಾರನ್ನು ಕೂಡ ಗ್ರಾಮೀಣಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ನಂತರ ಕಳೆದ ಮಾರ್ಚ್ 30ರಂದು ಹಾಸನ ಡಿಸಿಯಾಗಿ ಪ್ರಿಯಾಂಕಾ ಮೇರಿ ಅಧಿಕಾರ ವಹಿಸಿಕೊಂಡಿದ್ದರು.
ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಹಾಸನ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಬಹಳ ವರ್ಗಾವಣೆ ನಡೆದಿದೆ. ಕಳೆದೊಂದು ವರ್ಷದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಪಿ ಸಿ ಜಾಫರ್, ಡಿ ರಣದೀಪ್, ಅಕ್ರಮ್ ಪಾಷಾ, ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಡಿಸಿಯಾಗಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos