ರಾಜ್ಯ

ಬಿಲ್ಡರ್‌ ಗಳ ಸಮಸ್ಯೆ ಪರಿಹಾರಕ್ಕೆ ಸದ್ಯದಲ್ಲೇ ಮುಖ್ಯಮಂತ್ರಿಗಳೊಂದಿಗೆ ಸಭೆ: ಎಸ್‌ ಆರ್‌ ವಿಶ್ವನಾಥ್‌

Lingaraj Badiger

ಬೆಂಗಳೂರು: ದುರ್ಬಲ ಆರ್ಥಿಕ ಪರಿಸ್ಥಿತಿಯಲ್ಲಿ ಬಿಲ್ಡರ್‌ ಗಳು ತೀವ್ರ ತೊಂದರೆ ಎದುರಿಸುತ್ತಿದ್ದು, ರಾಷ್ಟ್ರ ನಿರ್ಮಾಣಕ್ಕೆ ಸಾಕಷ್ಟು ಕೊಡುಗೆ ನೀಡುತ್ತಿರುವ ಬಿಲ್ಡರ್‌ ಗಳ ಸಮಸ್ಯೆಗಳನ್ನು ರಾಜ್ಯ ಸರಕಾರ ಬಗೆಹರಿಸಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌* ಭರವಸೆ ನೀಡಿದ್ದಾರೆ.

ಬಿಲ್ಡರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್‌ ಎಂ ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿಶ್ವನಾಥ್ ಅವರು, ದೇಶದಲ್ಲಿ ನೋಟು ಅಮಾನ್ಯೀಕರಣದ ನಂತರ ಆಗಿರುವ ಆರ್ಥಿಕ ಬೆಳವಣಿಗೆಗಳ ಹಿನ್ನಲೆಯಲ್ಲಿ ಬಿಲ್ಡರ್‌ ಗಳು ತಾವು ನಿರ್ಮಿಸಿದ ಫ್ಲಾಟ್‌ ಗಳು ಮಾರಾಟವಾಗದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದರಲ್ಲಿ ಮಧ್ಯಮ ಗಾತ್ರದ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಇವರಿಗೆ ಇರುವ ತೊಂದರೆಗಳು, ರಾಜ್ಯ ಸರಕಾರದಿಂದ ಆಗಬಹುದಾದ ಹಲವಾರು ಅನುಕೂಲಗಳ ಬಗ್ಗೆ ಚರ್ಚೆ ನಡೆಸಲು ಸದ್ಯದಲ್ಲೇ ಮುಖ್ಯಮಂತ್ರಿಗಳ ಜೊತೆ ಸಭೆಗೆ ವ್ಯವಸ್ಥೆ ಮಾಡುವುದಾಗಿ ಹೇಳಿದರು.

ನಗರದ ಮೂಲಭೂತ ಸೌಕರ್ಯಗಳ ಹೆಚ್ಚಳಕ್ಕೆ ಯಡಿಯೂರಪ್ಪ ಅವರು ಬಹಳಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಈಗಾಗಲೇ ಹಲವಾರು ಯೋಜನೆಗಳನ್ನು ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆಗಳ ಅನುಷ್ಠಾನದ ನಂತರ ನಗರ ಮತ್ತಷ್ಟು ಸುಂದರವಾಗಲಿದೆ. ಈ ಯೋಜನೆಗಳ ಅನುಷ್ಠಾನದಲ್ಲಿ ಬಿಲ್ಡರ್ಸ್‌ ಗಳ ಅಗತ್ಯತೆ ಬಹಳಷ್ಟಿದೆ. ಇದನ್ನು ಮನಗೊಂಡು ಈ ಕ್ಷೇತ್ರದಲ್ಲಿ ಆರ್ಥಿಕ ಚಟುವಟಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ವಿಶ್ವನಾಥ್‌ ಭರವಸೆ ನೀಡಿದರು.

SCROLL FOR NEXT