ರಾಜ್ಯ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಸಿಬಿಐ ವರದಿಯಿಂದ ಎಲ್ಲ ಬಯಲಾಗಿದೆ - ಕೆ.ಜೆ‌.ಜಾರ್ಜ್

Raghavendra Adiga

ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿ ತಮ್ಮದೇನೂ ಪಾತ್ರವಿಲ್ಲ ಎಂದು ಹೇಳಿರುವುದು ಮನಸಿಗೆ ಸಮಾಧಾನ, ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಮೇಲಿನ ಆರೋಪ ಸತ್ಯಕ್ಕೆ ದೂರವಾಗಿತ್ತು. ಡಿ.ಕೆ ರವಿ ಆತ್ಮಹತ್ಯೆ ಪ್ರಕರಣದಲ್ಲೂ ಇಲ್ಲಸಲ್ಲದ ಆರೋಪ ಮಾಡಿದ್ದರು. ಈಗ ಸತ್ಯ ಏನು ಅಂತ ಜನರಿಗೆ ಗೊತ್ತಾಗಿದೆ ಎಂದರು.

ಪ್ರಧಾನಿ ಮೋದಿ ಹಿಂದೆ ಬೆಂಗಳೂರಿಗೆ ಚುನಾವಣಾ ಪ್ರಚಾರಕ್ಕೆ ಬಂದಾಗ ಅವರು ಸಹ ತಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜೈಲಿನಲ್ಲಿರಬೇಕಾದವರು ಸಚಿವರಾಗಿದ್ದಾರೆ ಎಂದು ಟೀಕಿಸಿದ್ದರು. ಬಿಜೆಪಿಯವರು ನಿರಂತರ ಆರೋಪ ಮಾಡುವ ಮೂಲಕ ತಮ್ಮನ್ನು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಿದ್ದರು. ಈಗ ಎಲ್ಲವೂ ಬಯಲಾಗಿದೆ ಎಂದರು.

ಡಿವೈಎಸ್ಪಿ ಎಂಕೆ ಗಣಪತಿ ಅವರ ಸಾವು ಪ್ರಕರಣದ ಸಂಬಂಧ ಸಿಬಿಐ ತನ್ನ ಅಂತಿಮ ತನಿಖಾ ವರದಿ ಸಲ್ಲಿಸಿದೆ. ಮಡಿಕೇರಿಯ ಜೆಎಫ್ಎಂ ನ್ಯಾಯಾಲಯಕ್ಕೆ ಸಿಬಿಐ ತನ್ನ ವರದಿ ಸಲ್ಲಿಸಿದ್ದು ಗಣಪತಿಯವರ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವರು ಪ್ರಚೋದನೆ ಮಾಡಿದ್ದಾರೆನ್ನಲು ಯಾವುದೇ ಮುಖ್ಯ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿರುವುದು ಜಾರ್ಜ್ ಸೇರಿ ಅನೇಕರಿಗೆ ದೊಡ್ಡ ರಿಲೀಫ್ಕೊಟ್ಟಂತಾಗಿದೆ.

ಬಿಜೆಪಿಗೆ ನೈತಿಕತೆ ಇದ್ದರೆ ಜಾರ್ಜ್ ಅವರ ಕ್ಷಮೆ ಕೇಳಲಿ: ದಿನೇಶ್ ಗುಂಡೂರಾವ್

 ಡಿವೈ ಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರ ಪಾತ್ರವಿಲ್ಲ ಎಂದು ಸಿಬಿಐ ವರದಿ ನೀಡಿದ್ದು, ಜಾರ್ಜ್ ವಿರುದ್ಧ ಅನಗತ್ಯ ಆರೋಪ ಮಾಡಿದ್ದ ಬಿಜೆಪಿ ನಾಯಕರು ಈಗ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಜಾರ್ಜ್ ಅವರ ಕೈವಾಡ ಇಲ್ಲ ಎನ್ನುವುದು ಗೊತ್ತಿದ್ದರೂ ಬಿಜೆಪಿ ಅನಗತ್ಯ ಆರೋಪ ಮಾಡಿ, ಅವರ ತೇಜೋವಧೆ ಮಾಡುವ ಪ್ರಯತ್ನ ನಡೆಸಿತ್ತು. ಈಗ ಸಿಬಿಐ ನವರೇ ಇದರಲ್ಲಿ ಜಾರ್ಜ್ ಕೈವಾಡ ಇಲ್ಲ ಎಂದು ವರದಿ ಕೊಟ್ಟಿದ್ದಾರೆ. ಈಗ ಬಿಜೆಪಿಯವರಿಗೆ ನೈತಿಕತೆ ಇದ್ದಿದ್ದೇ ಆದಲ್ಲಿ ಕ್ಷಮೆ ಕೇಳಬೇಕು. ಇಂಥ ಪ್ರಕರಣದಲ್ಲಿ ವಿವೇಚನೆಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ತೇಜೋವಧೆ ಮಾಡುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದು ತಿಳಿ ಹೇಳಿದರು.

ಶಾಸಕ ತನ್ವೀರ್ ಸೇಠ್ ಮೇಲಿನ‌ ಹಲ್ಲೆ ಪ್ರಕರಣದಲ್ಲಿಯೂ ಬಿಜೆಪಿ ಇದೇ ರೀತಿ ನಡೆದುಕೊಳ್ಳುತ್ತಿದೆ. ಬಿಜೆಪಿಯವರು ಮೊದಲು ಸತ್ಯಾಸತ್ಯತೆ ಅರಿಯಬೇಕು. ಮುಖ್ಯಮಂತ್ರಿಯಂತಹ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಸಿದ್ದರಾಮಯ್ಯ ವಿರುದ್ಧ ಬಿ.ಎಸ್. ಯಡಿಯೂರಪ್ಪ ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ. ಈ ಪ್ರಕರಣದಲ್ಲಿ ಯಾರೇ ಇದ್ದರೂ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅವರ ಹಿಂದೆ ಯಾರ ಕೈವಾಡ ಇದೆ ಎನ್ನುವುದನ್ನು ತನಿಖೆಯಿಂದ ಹೊರಬರಲಿ ಎಂದು ಒತ್ತಾಯಿಸಿದರು.

SCROLL FOR NEXT