ಹೊಸಪೇಟೆ: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆಯಾಗಿ ಮಂಜಮ್ಮ ಜೋಗತಿ ಆಯ್ಕೆಯಾಗಿದ್ದಾರೆ. ಇಂದಿನಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಹಿರಿಯ ಕಂಗ ಕಲಾವಿದೆಯಾಗಿರುವ ಮಂಜಮ್ಮ, ಮಂಗಳಮುಖಿಯಾಗಿ ಸಾಕಷ್ಟು ನೋವುಂಡಿದ್ದಾರೆ. ಕೌಟುಂಬಿಕ ಬಹಿಷ್ಕಾರಕ್ಕೆ ಒಳಗಾಗಿ ಜೋಗತಿ ವೃತ್ತಿಯನ್ನೇ ಬದುಕಿಗೆ ಆಧಾರ ಮಾಡಿಕೊಂಡು, ತಮ್ಮ 14ನೇ ವಯಸ್ಸಿನಿಂದಲೂ ಕಲಾ ಸೇವೆ ಮಾಡುತ್ತಾ ಬಂದಿದ್ದಾರೆ. ಜನಪದ ನೃತ್ಯದ ಮೂಲಕ ಗ್ರಾಮ, ಜಾತ್ರೆ, ಸಂತೆ, ವೇದಿಕೆ ಮತ್ತಿತರ ಕಡೆಗಳಲ್ಲಿ ಸಾವಿರಾರು ಪ್ರದರ್ಶನಗಳನ್ನು ನೀಡಿದ್ದಾರೆ.
ಜೋಗತಿ ಕಲೆ ಪ್ರದರ್ಶನ ಜೊತೆಗೆ, ನಾಟಕ, ನಿರ್ದೇಶನ, ಹಾಡು, ಕುಣಿತ ಮುಂತಾದ ಮನೋರಂಜನಾತ್ಮಕ ಕಲೆಗಳನ್ನು ರೂಢಿಸಿಕೊಂಡಿರುವ ಮಂಜಮ್ಮ ಜೋಗತಿ ಅವರಿಗೆ ರಾಜ್ಯ ಜಾನಪದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಜಾನಪದ ಜಾನ ಪ್ರಶಸ್ತಿ, ಜಾನಪದ ಲೋಕ , ಶ್ರೀ ತಾಯಮ್ಮ ಮಲ್ಲಮ್ಮ ದತ್ತಿನಿಧಿ, ಸೇರಿದಂತೆ 2010ರಲ್ಲಿ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯೂ ಸಂದಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಖ್ಯಾತ ನಿರ್ದೇಶಕ ಟಿಎಸ್ ನಾಗಾಭರಣ ಸೇರಿದಂತೆ ಒಟ್ಟು 16 ಅಕಾಡೆಮಿಗಳಿಗೆ ಅಧ್ಯಕ್ಷ , ಸದಸ್ಯರನ್ನು ಆಯ್ಕೆ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.