ಬೆಂಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನದಿಂದ ಗರಂ ಆಗಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಬಿಜೆಪಿಗೆ ಶಾಕ್ ನೀಡಲು ಮುಂದಾಗಿದ್ದಾರೆ.
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ಸೇರುವಂತೆ ತಮ್ಮಗೆ 5 ಕೋಟಿ ರೂಪಾಯಿಗೆ ಆಮಿಷವೊಡ್ಡಲಾಗಿತ್ತು ಎಂಬ ಗಂಭೀರ ಆರೋಪ ಮಾಡಿರುವ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ , ಆಪರೇಷನ್ ಕಮಲದ ವಿರುದ್ಧ ಇಡಿಗೆ ದೂರು ನೀಡಲು ಚಿಂತನೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಮತ್ತಿತರ ಜೊತೆಯಲ್ಲಿ ನವದೆಹಲಿಗೆ ತೆರಳುತ್ತಿದ್ದು, ಅಲ್ಲಿ ಡಿಕೆ ಬ್ರದರ್ಸ್ ಭೇಟಿ ಬಳಿಕ
ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಆಪರೇಷನ್ ಕಮಲದ ಪ್ರಸ್ತಾಪ ಮಾಡಿದ ಶ್ರೀನಿವಾಸ ಗೌಡ, ಬಿಜೆಪಿಗೆ ಸೇರ್ಪಡೆಯಾಗುವುದಕ್ಕಾಗಿ ಹಾಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ತಮ್ಮಗೆ 5 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಆರೋಪ ಮಾಡಿದ್ದರು. ಈ ಹೇಳಿಕೆ ವಿಧಾನಸಭೆ ಕಡತದಲ್ಲಿಯೂ ದಾಖಲಾಗಿದೆ.
ಸೂಕ್ತ ದಾಖಲೆಗಳೊಂದಿಗೆ ಆಪರೇಷನ್ ಕಮಲದ ವಿರುದ್ಧ ಇಡಿಗೆ ದೂರು ನೀಡಲು ಚಿಂತನೆ ನಡೆಸಲಾಗಿದ್ದು, ನಾಳೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ಒಂದು ವೇಳೆ ಹೀಗೆ ಮಾಡಿದರೆ ಬಿಜೆಪಿಗೆ ತಿರುಗುಬಾಣವಾಗಲಿದೆಯೇ ಎಂಬುದು ಕುತೂಹಲ ಕೆರಳಿಸಿದೆ.