ರಾಜ್ಯ

ಡಿಕೆಶಿ ಪರ ಪ್ರತಿಭಟನೆ: ನಗರದಲ್ಲಿ ಭಾರೀ ಭದ್ರತೆ, 5 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

Manjula VN

ಬೆಂಗಳೂರು: ಮಾಜಿ ಸಚಿವ ಡಿಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ಖಂಡಿಸಿ ಒಕ್ಕಲಿಗರ ಸಂಘ ಸಂಸ್ಥೆಗಳ ಒಕ್ಕೂಟ ಹಾಗೂ ಕರ್ನಾಟಕ ರಕ್ಷಣಾ ವೇದಿಗೆ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

ಪ್ರತಿಭಟನೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಅಧಿಕಾರಿಗಳು ಈಗಾಗಲೇ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದ್ದಾರೆ. 

ಭದ್ರತೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದು, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸರು ಆಯುಕ್ತರ ನೇತೃತಚ್ವದಲ್ಲಿ 11 ಡಿಸಿಪಿ, 42 ಎಸಿಪಿ, 106 ಇನ್ಸ್ಪೆಕ್ಟರ್, 373 ಸಬ್ ಇನ್ ಸ್ಪೆಕ್ಟರ್, 374 ಸಹಾಯ ಸಬ್ ಇನ್ಸ್ಪೆಕ್ಟರ್, 2280 ಮುಖ್ಯ ಪೇದೆಗಳು, 550 ಗೃಹ ರಕ್ಷದ ದಳ ಸಿಬ್ಬಂದಿ ಹಾಗೂ 50 ಕೆಎಸ್ಆರ್'ಪಿ ತುಕಡಿ, 40 ಸಿಆರ್'ಪಿಎಫ್, 4 ಕ್ಷಿಪ್ರ ಕಾರ್ಯ ಪಡೆಗಳನ್ನು ಭದ್ರೆತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. 

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಒಕ್ಕಲಿಗ ನಾಯಕರು ಭಾಗಿಯಾಗುವ ಸಾಧ್ಯತೆಗಳಿದ್ದು, 10ಕ್ಕೂ ಹೆಚ್ಚು ಸಂಘಟನೆಗಳು ರ್ಯಾಲಿ ನಡೆಸುವ ಕುರಿತು ಮನವಿ ಪತ್ರಗಳನ್ನು ಸಲ್ಲಿಸಿದೆ. ಪ್ರತಿಭಟನೆಗೆ ನಾವು ಅನುಮತಿ ನೀಡಿದ್ದೇವೆ. ಆದರೆ, ಪ್ರತಿಭಟನೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಲ್ಲಿ ಅದಕ್ಕೆ ರ್ಯಾಲಿ ಆಯೋಜಕರೇ ಹೊಣೆಗಾರರಾಗಲಿದ್ದಾರೆಂದು ಈಗಾಗಲೇ ಎಚ್ಚರಿಕೆ ನೀಡಿದ್ದೇವೆಂದು ತಿಳಿಸಿದ್ದಾರೆ. 

ಸಂಚಾರ ಮಾರ್ಗ ಬದಲಾವಣೆ
ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವ ಹಿನ್ನಲೆಯಲ್ಲಿ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. 

ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3.30ರವರೆಗೆ ಪ್ರತಿಭಟನೆ ನಡೆಯಲಿದ್ದು, ಪ್ರತಿಭಟನಾ ಮೆರವಣಿಗೆ ನಡೆಯುವ ರಸ್ತೆಗಳಲ್ಲಿ ವಾಹನ ಸವಾರರು ಹೋಗದೆ ಪರ್ಯಾಯ ವ್ಯವಸ್ಥೆಗೆ ಸಹಕರಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಮನವಿ ಮಾಡಿದ್ದಾರೆ. ಅಲ್ಲದೆ, ಈ ರಸ್ತೆಗಳಲ್ಲಿ ಯಾವುದೇ ಆ್ಯಂಬುಲೆನ್ಸ್'ಗಳು ಹೋಗದಂತೆ ಎಲ್ಲಾ ಆಸ್ಪತ್ರೆಗಳಿಗೂ ಸ್ಥಳೀಯ ಸಂಚಾರ ಠಾಣೆಗಳ ಮೂಲಕ ಸೂಚನೆ ನೀಡಲಾಗಿದೆ ಎಂದು ಭಾಸ್ಕರ್ ರಾವ್ ಅವರು ಮಾಹಿತಿ ನೀಡಿದ್ದಾರೆ. 

SCROLL FOR NEXT