ರಾಜ್ಯ

ಸರ್ಕಾರದ ವಿಳಂಬ ನೀತಿಯೇ ರಾಜ್ಯದಲ್ಲಿ ಕೊರೋನಾ ಹೆಚ್ಚಳಕ್ಕೆ ಕಾರಣ- ಸಿದ್ದರಾಮಯ್ಯ ಆರೋಪ

Nagaraja AB

ಬೆಂಗಳೂರು: ರಾಜ್ಯದಲ್ಲಿ‌ ಕೊರೋನಾ ಸೋಂಕು ಹೆಚ್ಚುತ್ತಿರಲು ಸರ್ಕಾರ ಸೋಂಕು ಪತ್ತೆಯಾದ ಆರಂಭದಲ್ಲಿ ತೋರಿಸಿದ ವಿಳಂಬ ನೀತಿಯೇ ಕಾರಣ ಎಂದು‌ ವಿಪಕ್ಷ‌ ನಾಯಕ‌ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ‌ ಮಾಡಿದ್ದಾರೆ

 ಲಾಕ್‌ ಡೌನ್ ಆದ ಬಳಿಕ  ಮೊದಲ ಬಾರಿಗೆ ಇಂದು  ವಿಧಾನಸೌಧಕ್ಕೆ ಆಗಮಿಸಿ, ಸರ್ಕಾರದ ವಿವಿಧ‌ ಇಲಾಖೆಗಳ ಅಧಿಕಾರಿಗಳನ್ನು ಭೇಟಿ ಮಾಡಿ ಸರ್ಕಾರ ಕೊರೊನಾ ಹಿನ್ನೆಲೆಯಲ್ಲಿ ಕೈಗೊಂಡ ವಿವರದ ಮಾಹಿತಿ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೊರೋನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳು, ಅದಕ್ಕಾಗಿ ಮಾಡಿಕೊಂಡಿರುವ ಸಿದ್ಧತೆ, ವೈದ್ಯಕೀಯ ಸಿಬ್ಬಂದಿಗೆ ಒದಗಿಸಿರುವ ಸೌಕರ್ಯ, ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರು, ಕೂಲಿ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರು, ಬಡವರ ನೆರವಿಗೆ ಕೈಗೊಂಡಿರುವ ಕಾರ್ಯಕ್ರಮಗಳೇನು ಎಂಬುದನ್ನು ತಿಳಿದುಕೊಳ್ಳಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾಗಿ ತಿಳಿಸಿದರು.

ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರಕ್ಕೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಸೋಂಕಿತರ ಪರೀಕ್ಷೆ ಕಾರ್ಯ ಮಂದಗತಿಯಲ್ಲಿ ಸಾಗಿದೆ. ಹೀಗಾಗಿ ಪರೀಕ್ಷೆ ಪ್ರಮಾಣವನ್ನು ಶೀಘ್ರಗೊಳಿಸಬೇಕು.ಸೋಂಕು ಕಂಡು ಬಂದ ಸಂದರ್ಭದಲ್ಲೇ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ವಿಧಾನ‌ ಮಂಡಲ ಅಧಿವೇಶನ ನಡೆಸುವುದು ಬೇಡ ಎಂದರೂ ಸರ್ಕಾರ‌ ಕೇಳಲಿಲ್ಲ. ಕೊರೊನಾ‌ ಪತ್ತೆಯಾದರೂ ಸರ್ಕಾರ ಆರಂಭದಲ್ಲೇ ನಿಧಾಗತಿಯಲ್ಲಿ ಕಾರ್ಯ ನಿರ್ವಹಿಸಿತು ಎಂದು ಬೇಸರ ವ್ಯಕ್ತಪಡಿಸಿದರು

ಪರೀಕ್ಷೆ ನಡೆಸುವ ಕಿಟ್‍ಗಳೂ ಸರಬರಾಜು ಆಗುತ್ತಿಲ್ಲ. ಆ ಬಗ್ಗೆ ಸರ್ಕಾರ ತುರ್ತಾಗಿ ಗಮನ ಹರಿಸಬೇಕು. ಪಾಸ್ ರದ್ದು ಮತ್ತೊಂದರಿಂದ ಏನೂ ಪ್ರಯೋಜನವಿಲ್ಲ. ಐಟಿ ಕಂಪನಿಯವರು ಕೆಲಸ ಮಾಡಲೇ ಬೇಕು. ಆದರೆ ಟೆಸ್ಟಿಂಗ್ ಸಂಖ್ಯೆ ಹೆಚ್ಚಾಗಬೇಕು, ಸಾಮಾಜಿಕ ಅಂತರ ಸರಿಯಾಗಿ‌ ಪಾಲನೆ ಆಗಬೇಕು. ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ. ವಿದೇಶದಿಂದ ಬಂದವರ ಸಂಖ್ಯೆ ಅಲ್ಲಿ ಹೆಚ್ಚಾಗಿತ್ತು. ಆದರೂ ಅಲ್ಲಿ ಸೋಂಕು ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ನಮ್ಮಲ್ಲಿ ಹೆಚ್ಚಾಗುತ್ತಿದೆ. ಈ ಬಗ್ಗೆ ಅಧ್ಯಯನ ನಡೆಸುವುದು ಸೂಕ್ತ‌ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ಮೈಸೂರಿನ ಜ್ಯುಬಿಲಿಯೆಂಟ್ ಕಾರ್ಖಾನೆಯಲ್ಲಿ ಚೀನಾದ ಕಂಟೈನರ್ ನಿಂದ ಸೋಂಕು ಬಂದಿದೆ ಎಂದು ಹೇಳಲಾಗಿತ್ತು. ಆದರೆ, ಪರೀಕ್ಷಾ ವರದಿಯಲ್ಲಿ ನೆಗಟಿವ್ ಬಂದಿದೆ. ಆರಂಭದಲ್ಲೇ ಅಲ್ಲಿ ಸರಿಯಾದ ರೀತಿಯಲ್ಲಿ ಕ್ವಾರಂಟೈನ್ ಮಾಡಿದ್ದರೆ ಸೋಂಕು ವೇಗವಾಗಿ ಹರಡುತ್ತಿರಲಿಲ್ಲ. ಹಣ್ಣು, ತರಕಾರಿ ಬೆಳೆಯುತ್ತಿರುವ ರೈತರಿಗೆ ದೊಡ್ಡ ಅನ್ಯಾಯವಾಗುತ್ತಿದೆ. ಬೆಳೆದಿದ್ದನ್ನು ಖರೀದಿ ಮಾಡುವವರಿಲ್ಲ. ಅವರನ್ನು ಕೇಳುವವರಿಲ್ಲ. ಸರ್ಕಾರವೇ ಖರೀದಿ ಮಾಡಲಿ ಎಂದು ಒತ್ತಾಯಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.

SCROLL FOR NEXT