ರಾಜ್ಯ

ಇನ್ನಷ್ಟು ಬಿಗಿ ಕ್ರಮದೊಂದಿಗೆ ಲಾಕ್ಡೌನ್ ಮುಂದುವರಿಕೆ, ಹಲ್ಲೆಕೋರರ ಮೇಲೆ ಕ್ರಮಕ್ಕೆ ಸುಗ್ರಿವಾಜ್ಞೆ: ಸಿಎಂ ಯಡಿಯೂರಪ್ಪ

Lingaraj Badiger

ಬೆಂಗಳೂರು: ಮೇ 3ರ ವರೆಗೆ ಲಾಕ್ ಡೌನ್ ಮುಂದುವರೆಯಲಿದ್ದು, ಇನ್ನಷ್ಟು ಬಿಗಿ ಕ್ರಮಗಳ ಮೂಲಕ ಕೊರೋನಾ ವೈರಸ್ ನಿಯಂತ್ರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಇಂದು ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಪಾದರಾಯನಪುರ ದಲ್ಲಿ ನಡೆದ ಘಟನೆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರೆ ಸಹಿಸುವುದಿಲ್ಲ. ಕೇರಳ ಮತ್ತು ಉತ್ತರ ಪ್ರದೇಶದಲ್ಲಿ ಇಂತಹ ಘಟನೆಗಳು ನಡೆದರೆ ಅದು ಶಿಕ್ಷಾರ್ಹ ಅಪರಾಧ. ಇದೇ ಮಾದರಿಯನ್ನು ರಾಜ್ಯದಲ್ಲೂ ಸಹ ಜಾರಿಗೆ ತರಲು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದರು.

ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆದರೆ ಅದು ಶಿಕ್ಷಾರ್ಹ ಅಪರಾಧ ಎಂದು ಸುಗ್ರೀವಾಜ್ಞೆ ಹೊರಡಿಸುತ್ತೇವೆ. ಅವರ ಆರೋಗ್ಯದ ದೃಷ್ಟಿಯಿಂದ ನಾವು ಕ್ರಮ ತೆಗೆದು ಕೊಳ್ಳುತ್ತಿದ್ದೇವೆ. ಇವರೆಲ್ಲಾ ಕಾನೂನು ಕೈಗೆ ತೆಗೆದುಕೊಂಡವರಂತೆ ವರ್ತನೆ ಮಾಡುತ್ತಿದಾರೆ. ಇದನ್ನು ಸಹಿಸುವುದಿಲ್ಲ. ಪ್ರಕರಣ ಸಂಬಂಧ ಈಗಾಗಲೇ 54 ಜನರನ್ನು ಬಂಧಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಪಾದರಾಯನಪುರದಲ್ಲಿ ಗೂಂಡಾಗಿರಿ ನಡೆದಿದೆ.‌ ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ಶೀಘ್ರದಲ್ಲೇ ‌ಮತ್ತಷ್ಟು ಕಿಡಿಗೇಡಿಗಳನ್ನು ಬಂಧಿಸಲಾಗುವುದು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ‌ಕ್ರಮ‌ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗೂಂಡಾಗಿರಿ ಪ್ರವೃತ್ತಿಯನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ ಎಂದರು.

SCROLL FOR NEXT