ರಾಜ್ಯ

ರಾಜ್ಯದಲ್ಲಿ ಅತಿವೃಷ್ಟಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್‌.ಡಿ.ದೇವೇಗೌಡ ಒತ್ತಾಯa

Raghavendra Adiga

ಬೆಂಗಳೂರು: ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಮಹಾಮಾರಿ ಕೊರೋನಾ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ. ಇದರ ಜೊತೆಗೆ ದುರದೃಷ್ಟವಷಾತ್ ರಾಜ್ಯದಲ್ಲಿ ಅತಿವೃಷ್ಟಿಯಿಂದ ಜನತೆ ಕಂಗಾಲು ಪಡುವಂತಾಗಿದೆ. ಇದೆ ಸಮಯದಲ್ಲಿ ಮುಖ್ಯಮಂತ್ರಿಗಳಿಗೆ ಕೊರೋನಾ ಸೋಂಕು ತಗುಲಿದೆ, ಅವರು ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಸಂದರ್ಭ ಬಂದಿದೆ. ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳು ಮುಂಗಾರಿನ ಅಬ್ಬರದ ಭೀತಿಯಿಂದ ನಲುಗಿದೆ. ಆದ್ದರಿಂದ ಮುಖ್ಯಮಂತ್ರಿ ಮತ್ತು ಸಚಿವರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಅತಿವೃಷ್ಟಿಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ. ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿದೆ. ಜೊತೆಗೆ ಮನೆ-ಮಠ ಕಳೆದುಕೊಂಡವರಿಗೆ ತಡಮಾಡದೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ ಎಂದು ದೇವೇಗೌಡ ಹೇಳಿದ್ದಾರೆ.

ಸತತ ನೆರೆಯಿಂದ ಸಂತ್ರಸ್ತರಾಗಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಏರಬೇಕೆಂದು ಅವರು ಒತ್ತಾಯಿಸಿದ್ದಾರೆ.

ಅತಿವೃಷ್ಟಿ ಯಿಂದ ಹಾನಿಗೊಳಗಾಗಿರುವ ಸ್ಥಳಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ತಕ್ಷಣ ಹಣಕಾಸಿನ ವ್ಯವಸ್ಥೆಯನ್ನು ಮಾಡಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

SCROLL FOR NEXT