ರಾಜ್ಯ

ಬೆಂಗಳೂರು ಗಲಭೆ: ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ವಿಚಾರಣೆ

Manjula VN

ಬೆಂಗಳೂರು: ನಗರದ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. 

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಸದಸ್ಯರಾದ ಸಂಪತ್ ರಾಜ್ ಹಾಗೂ ಮತ್ತೊಬ್ಬ ಕಾರ್ಪೊರೇಟರ್ ಅಬ್ದುಲ್ ರಕೀಬ್ ಜಾಕೀರ್ ಅವರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಇಬ್ಬರಿಗೂ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. 

ಸಂಪತ್ ರಾಜ್ ಅವರು ಡಿಜೆ ಹಳ್ಳಿಯ ಕಾರ್ಪೊರೇಟರ್ ಆಗಿದ್ದು, ಝಾಕೀರ್ ಪುಲಿಕೇಶಿ ನಗರದ ಕಾರ್ಪೊರೇಟರ್ ಆಗಿದ್ದಾರೆ. ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಇಬ್ಬರೂ ನಾಟರು ನಿನ್ನೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಿಸಿಬಿ ಕಚೇರಿಗೆ ಹಾಜರಾಗಿದ್ದರು. ಇದರಂತೆ ಸಿಸಿಬಿ ಪೊಲೀಸರು ಇಬ್ಬರನ್ನು ಸಂಜೆ 5 ಗಂಟೆಯವರೆಗೂ ವಿಚಾರಣೆಗೊಳಪಡಿಸಿದ್ದರು. ಇಬ್ಬರನ್ನೂ 4 ಗಂಟೆಗಳಿಗೂ ಹೆಚ್ಚು ಕಾಲ ಪೊಲೀಸರು ವಿಚಾರಣೆ ನಡೆಸಿದ್ದರು ಎಂದು ಮೂಲಗಳು ಮಾಹಿತಿ ನೀಡಿವೆ. 

ಇಬ್ಬರೂ ಕಾರ್ಪೊರೇಟರ್ ಗಳು ಗಲಭೆ ಪ್ರಕರಣ ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿರುವ ಗಲಭೆಕೋರರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದರು ಎಂದುಹ ಹೇಳಲಾಗುತ್ತಿದೆ. 

ವಿಚಾರಣೆಗೊಳಪಟ್ಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ಬರೂ ನಾಯಕರೂ, ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇವೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ಕೇಂದ್ರ ಕಾರಾಗೃಹಕ್ಕೆ ಆರೋಪಿ ನವೀನ್
ಈಗಾಗಲೇ ಬಂಧನಕ್ಕೊಳಗಾಗಿರುವ ಪ್ರಕರಣದ ಪ್ರಮುಖ ಆರೋಪಿ ನವೀನ್ ನನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ನವೀನ್ ನನ್ನು ಬೆಂಗಳೂರು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. 

SCROLL FOR NEXT