ವಿಮ್ಸ್ 
ರಾಜ್ಯ

ಸೂಪರ್ ಸ್ಪೆಷಾಲಿಟಿ ಟ್ರಾಮಾ ಸೆಂಟರ್‌ ಬಳ್ಳಾರಿ, ಸುತ್ತಮುತ್ತಲ ರೋಗಿಗಳಿಗೆ ಸಂಜೀವಿನಿ: ಸಿಎಂಯಡಿಯೂರಪ್ಪ

ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಬಳ್ಳಾರಿ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ವಿಮ್ಸ್)ನಲ್ಲಿ "ಸೂಪರ್ ಸ್ಪೆಷಾಲಿಟಿ ಟ್ರಾಮಾ ಘಟಕ"ವನ್ನು‌ ಸೋಮವಾರ...

ಬೆಂಗಳೂರು: ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಬಳ್ಳಾರಿ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ವಿಮ್ಸ್)ನಲ್ಲಿ "ಸೂಪರ್ ಸ್ಪೆಷಾಲಿಟಿ ಟ್ರಾಮಾ ಘಟಕ"ವನ್ನು‌ ಸೋಮವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್‌ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ, ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕೇಂದ್ರ ಮತ್ರು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಟ್ರಾಮಾ ಸೆಂಟರ್‌ ಅನ್ನು 150 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಟ್ರಾಮ್ ಕೇರ್ ಸೆಂಟರ್, ತುರ್ತು ಚಿಕಿತ್ಸಾ ಘಟಕ ಸೇರಿ ಒಟ್ಟು 200 ಹಾಸಿಗೆಗಳನ್ನು ಹೊಂದಿದ್ದು, ಘಟಕದಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ನ್ಯುರೋ ಸರ್ಜರಿ, ಪ್ಲಾಸ್ಟಿಕ್ ಸರ್ಜರಿ, ಅರ್ಥೋಪೆಡಿಕ್ಸ್, ರೇಡಿಯೋಲಾಜಿ, ಅನಸ್ತೇಶಿಯಾ ವಿಭಾಗಗಳನ್ನು ಈ ಘಟಕ ಹೊಂದಿವೆ. ಬಳ್ಳಾರಿ ಹಾಗೂ ಸುತ್ತಮುತ್ತಲ, ನೆರೆ ರಾಜ್ಯ ಆಂಧ್ರಪ್ರದೇಶದಿಂದ ಪ್ರತಿದಿನ ಬರುವ ಸಾವಿರಾರು ರೋಗಿಗಳಿಗೆ ಈ ಆಸ್ಪತ್ರೆ ಸಂಜೀವಿನಿಯಾಗಿದೆ. ಈ ಹಿಂದೆ ತುರ್ತು ಚಿಕಿತ್ಸೆಗಾಗಿ ದೂರದ ಬೆಂಗಳೂರಿಗೆ ಬರುವ ಅಗತ್ಯವಿತ್ತು. ತುರ್ತು ಚಿಕಿತ್ಸಾ ಘಟಕದಿಂದ ಇನ್ನು ಮುಂದೆ ಇಲ್ಲೇ ಹೆಚ್ಚಿನ ಚಿಕಿತ್ಸೆ ದೊರೆಯಲಿದೆ ಎಂದರು.

ಜನಸಾಮಾನ್ಯರಿಗೆ ಆರೋಗ್ಯ ಸೇವೆಯನ್ನು ಸುಲಭ ದರದಲ್ಲಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಕೋವಿಡ್‌ 19 ಅನ್ನು ಸಮರ್ಥವಾಗಿ ನಿರ್ವಹಿಸುವುದರ ಜೊತೆಗೆ ರಾಜ್ಯದ ಜನಜೀವನ ಸುಗಮಗೊಳಿಸಲು ಸರ್ಕಾರ ಅಹರ್ನಿಶಿ ಶ್ರಮಿಸುತ್ತಿದೆ. ಸಂಘ ಸಂಸ್ಥೆಗಳು ಕೂಡ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕೊರೋನಾ ನಿಯಂತ್ರಣದಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ. ಇದಕ್ಕಾಗಿ ಎಲ್ಲಾ ರೀತಿಯ ತಾಂತ್ರಿಕ ಬೆಂಬಲ ಹಾಗೂ ಮೂಲಸೌಕರ್ಯವನ್ನು ಒದಗಿಸಲಾಗಿದೆ. ಈ ಸಂಬಂಧ ನೀವು ಶ್ಲಾಘನೆ ವ್ಯಕ್ತಪಡಿಸಿರುವುದು ನಮ್ಮಲ್ಲಿ ಇನ್ನಷ್ಟು ಸ್ಫೂರ್ತಿಯನ್ನು ಹೆಚ್ಚಿಸುತ್ತದೆ ಎಂದರು.

ಗುಲ್ಬರ್ಗಾದ ಇಎಸ್‌ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಹಾಗೂ ಮೆಡಿಕಲ್ ಕಾಲೇಜನ್ನು ಏಮ್ಸ್ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಕೇಂದ್ರ ಸಚಿವ ಹರ್ಷವರ್ಧನ್‌ ಅವರಿಗೆ ಮನವಿ ಮಾಡಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ "ಸೂಪರ್‌ ಸ್ಪೆಷಾಲಿಟಿ ಟ್ರೋಮಾ ಸೆಂಟರ್" ತೆರೆದಿರುವುದು ಹೈದರಾಬಾದ್‌ ಕರ್ನಾಟಕ ಭಾಗದ ಜನರಿಗೆ ಹೆಚ್ಚು ಉಪಯುಕ್ತವಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯುನ್ನತ ಟ್ರಾಮಾ ಸೆಂಟರ್ ತೆರೆದಿರುವುದು ಅತ್ಯಂತ ಅವಶ್ಯವಾಗಿದೆ. ಪ್ರತಿ ವರ್ಷ ರಾಜ್ಯದಲ್ಲಿ 4.7 ಲಕ್ಷ ಜನರು ರಸ್ತೆ ಅಪಘಾತಕ್ಕೆ ಒಳಗಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಮೃತಪಡುತ್ತಿದ್ದಾರೆ. ರಸ್ತೆ ಅಪಘಾತ ನಡೆದ 1 ಗಂಟೆ ಗೋಲ್ಡನ್‌ ಹವರ್‌ ಎಂದು ಪರಿಗಣಿಸುತ್ತೇವೆ. ಈ ಅವಧಿಯಲ್ಲಿ ಚಿಕಿತ್ಸೆ ನೀಡಿದರೆ ಬದುಕಿಸಬಹುದು. ಇಂಥ ತುರ್ತು ಚಿಕಿತ್ಸೆಗಾಗಿ ದೂರದ ಬೆಂಗಳೂರಿಗೆ ಬರುವ ಅಗತ್ಯವಿತ್ತು. ಈಗ ಬಳ್ಳಾರಿ ಸುತ್ತಮುತ್ತಲಿನ ಜಿಲ್ಲೆ ಹಾಗೂ ರಾಜ್ಯದಲ್ಲಿ ತುರ್ತು ಚಿಕಿತ್ಸೆ ಟ್ರೋಮಾ ಕೇಂದ್ರದಲ್ಲಿ ಪಡೆಯಬಹುದು ಎಂದರು.

ನೂತನ ಟ್ರೌಮಾ ಸೆಂಟರ್‌ ನಿರ್ಮಾಣಕ್ಕೆ ಕೇಂದ್ರ ಸರಕಾರ ಕೊಡುಗೆ ಅಪಾರ. ಒಟ್ಟು 200 ಬೆಡ್‌ ಸಾರ್ಮರ್ಥ್ಯದ ಟ್ರೋಮಾ ಸೆಂಟರ್‌ 72 ಐಸಿಯು ಬೆಡ್, 20 ವೆಂಟಿಲೇಟರ್ ಹಾಗೂ ಜನರಲ್ ವಾರ್ಡ್‌ ಗಳನ್ನು ಒಳಗೊಂಡಿದೆ. ಹತ್ತಿರದ ನೆರೆ ರಾಜ್ಯದಲ್ಲಿ ಅಪಘಾತವಾದರೂ ಸಹ ಈ ಟ್ರೋಮಾ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲು ಸಹಕಾರಿಯಾಗಲಿದೆ.

ವೈದ್ಯಕೀಯ ಸೇವೆಯಲ್ಲಿ ಇತರೆ ರಾಜ್ಯಗಳಿಂತ‌ ಕರ್ನಾಟಕ ಮುಂಚೂಣಿಯಲ್ಲಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಿಸಲು ಹಾಗೂ ಸೂಕ್ತ ಚಿಕಿತ್ಸೆಗಾಗಿ ಕಡಿಮೆ ಅವಧಿಯಲ್ಲಿ 20 ಸಾವಿರ ಐಸಿಯು ಬೆಡ್‌ಗಳ ನಿರ್ಮಾಣವನ್ನು ಮಾಡುವ ಮೂಲಕ ರಾಜ್ಯದ ಸಾಮರ್ಥ್ಯ ತೋರಿಸಿದ್ದೇವೆ ಎಂದರು.

2021 ರೊಳಗೆ ನೂತನ ವೈದ್ಯಕೀಯ ಕಾಲೇಜು ಪ್ರಾರಂಭ: ಕಾರ್ಯಕ್ರಮದ ನಡುವೆ ಕೇಂದ್ರ ಸಚಿವ ಹರ್ಷವರ್ಧನ್ ಕರ್ನಾಟಕದಲ್ಲಿ ಶೀಘ್ರವೇ ವೈದ್ಯಕೀಯ ಕಾಲೇಜು ಪ್ರಾರಂಭಿಸುವಂತೆ ಹೇಳಿದರು. ಅದಕ್ಕೆ ಉತ್ತರಿಸಿದ ಸಚಿವರು, ಚಿಕ್ಕಬಳ್ಳಾಪುರ ಸೇರಿದಂತೆ 4 ನೂತನ ವೈದ್ಯಕೀಯ ಕಾಲೇಜುಗಳು 202 1 ರೊಳಗೆ ಕಾರ್ಯಾರಂಭ ಮಾಡಲಿವೆ ಎಂದು ಹೇಳಿದರು. ಇತ್ತೀಚೆಗೆ ಚಿಕ್ಕಬಳ್ಳಾಪುರಕ್ಕೆ ಭೇಟಿ‌ ನೀಡಿದ್ದ ವೇಳೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದಾಗಿ ಉಲ್ಲೇಖಿಸಿದರು.

ಕಾರ್ಯಕ್ರಮದಲ್ಲಿ ವಿಮ್ಸ್‌ನ ನೂತನ ಸಿಟಿ ಸ್ಯಾನರ್‌‌ನನ್ನು ಸಚಿವರ ಡಾ. ಸುಧಾಕರ್ ಅವರು ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವರಾದ ಅಶ್ವಿನ್ ಕುಮಾರ್ ಚೌಬೆ, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಇತರರು ಪಾಲ್ಗೊಂಡಿದ್ದರು.

ಟ್ರೋಮಾ ಸೆಂಟರ್‌ನ ವಿಶೇಷತೆ: 150 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟ್ರೋಮಾ ಕೇಂದ್ರದಲ್ಲಿ ಒಟ್ಟು 200 ಬೆಡ್‌ ಒಳಗೊಂಡಿದೆ. 72 ಐಸಿಯು ಬೆಡ್, 20 ವೆಂಟಿಲೇಟರ್, ಸಿಟಿ ಸ್ಕ್ಯಾನ್, ಡಿಜಿಟಲ್‌ ಎಕ್ಸ್‌ ರೇ ಸೌಕರ್ಯ ಇರಲಿದೆ.

ಜೊತೆಗೆ ಸೂಪರ್‌ ಸ್ಪೆಷಾಲಿಟಿ ಎಮರ್ಜೆನ್ಸಿ ಹಾಗೂ ಟ್ರೋಮಾ, ನ್ಯೂರೋ ಸರ್ಜರಿ ಹಾಗೂ ಆರ್ಥೋಪೆಡಿಕ್‌ ಸೇವೆ ಸಹ ಒಳಗೊಂಡಿದೆ.

ಶಾಸಕ ನಾಗೇಂದ್ರ, ಸಂಸದ ನಾಸೀರ್ ಹುಸೇನ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT