ಮೈಸೂರು: ರೈತ ವಿರೋಧಿ ಮಸೂದೆ ಹಿಂಪಡೆಯಲು ಹಾಗೂ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಬೆಂಬಲ ನೀಡಿರುವ ರಾಜ್ಯದ ರೈತರು, ಶೀಘ್ರದಲ್ಲೇ 100 ವಾಹನಗಳಲ್ಲಿ ರಾಷ್ಟ್ರ ರಾಜಧಾನಿಗೆ ತೆರಳಲಿದ್ದಾರೆ.
ಈ ಕುರಿತು ಮಾತನಾಡಿರುವ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ನೂತನ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಪೊಲೀಸರು ತಡೆಹಿಡಿದಿರುವ ರೀತಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ರಾಷ್ಟ್ರರಾಜಧಾನಿ ದೆಹಲಿಗೆ ಶೀಘ್ರದಲ್ಲೇ 100 ವಾಹನಗಳಲ್ಲಿ ರೈತರನ್ನು ಕಳುಹಿಸಿ, ಪ್ರತಿಭಟನೆಗೆ ಬೆಂಬಲ ನೀಡುತ್ತೇವೆ. ಶೀಘ್ರದಲ್ಲೇ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ನಮ್ಮ ಭವಿಷ್ಯದ ಪ್ರತಿಭಟನೆ ಕುರಿತು ಶೀಘ್ರದಲ್ಲೇ ಮಾಹಿತಿ ನೀಡುತ್ತೇವೆಂದು ಹೇಳಿದ್ದಾರೆ.
ಡಿಸೆಂಬರ್ 7-15ರವರೆಗೂ ರಾಜ್ಯದಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಈ ವೇಳೆ ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. ಹೊಸ ನೀತಿ, ಕಾಯ್ದೆಗಳನ್ನು ತರುವ ಮೂಲಕ ಜಾರಿಯಲ್ಲಿರುವ ಕಾನೂನುಗಳನ್ನು ಸರ್ಕಾರ ಬದಲಾವಣೆ ಮಾಡುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ರೈತರಿಗಿಂತಲೂ ಕಾರ್ಪೊರೇಟ್ ಸಂಸ್ಥೆಗಳ, ಮಾಲೀಕರ ಮೇಲೆ ಹೆಚ್ಚು ಕಾಳಜಿ ವಹಿಸಿದ್ದಾರೆಂದು ತಿಳಿಸಿದ್ದಾರೆ.