ರಾಜ್ಯ

ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಬಿಡಲು ಮುಖ್ಯಮಂತ್ರಿಗಳ ಕರೆ

Srinivas Rao BV

ಬೆಂಗಳೂರು: ಮುಷ್ಕರ ನಿರತ ರಾಜ್ಯ ಸಾರಿಗೆ ಸಂಸ್ಥೆ ನೌಕರರು ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. 

ಇಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಚರ್ಚೆಯಲ್ಲಿ ಸಾರಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆನ್ನುವ ಬೇಡಿಕೆಯನ್ನು ಹೊರತುಪಡಿಸಿ ವೇತನ ತಾರತಮ್ಯ, ಕೋವಿಡ್ 19 ರಿಂದ ಮೃತರಾದ ಸಾರಿಗೆ ನೌಕರರ ಕುಟುಂಬಗಳಿಗೆ 30 ಲಕ್ಷ ರೂ.ಗಳ ಪರಿಹಾರ, ಮೇಲಾಧಿಕಾರಿಗಳ ಕಿರುಕುಳ ತಪ್ಪಿಸಲು ಕ್ರಮ ಮುಂತಾದ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು.  

ಇವುಗಳಿಗೆ ಸಭೆಯಲ್ಲಿ ಒಪ್ಪಿಕೊಂಡು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರಕಟಿಸುವುದಾಗಿ ಹೇಳಿದ ಸಾರಿಗೆ ನೌಕಕರ ಸಂಘದ ಮುಖಂಡರು, ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ.  

ಕೋಡಿಹಳ್ಳಿ ಚಂದ್ರಶೇಖರ್ ಅವರು ಅನಗತ್ಯವಾಗಿ ನೌಕರರ ದಾರಿತಪ್ಪಿಸುತ್ತಿರುವುದು   ಸರಿಯಲ್ಲ.  ಅವರ ದುರುದ್ದೇಶಪೂರಿತ ನಡೆ ಖಂಡನೀಯ ಎಂದಿರುವ ಮುಖ್ಯಮಂತ್ರಿಗಳು ಮುಷ್ಕರದಿಂದ ಸಾರ್ವಜನಿಕರಿಗೆ  ತೀವ್ರ ತೊಂದರೆ, ಸಾರಿಗೆ ಸಂಸ್ಥೆಗೆ ನಷ್ಟ ಹಾಗೂ ಸಾರಿಗೆ ಸಂಸ್ಥೆಯ ನೌಕರರಿಗೂ ತೊಂದರೆಯಾಗುತ್ತದೆ.  ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.

SCROLL FOR NEXT