ರಾಜ್ಯ

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೆ ತೀರ್ಮಾನ

Srinivas Rao BV

ಬೆಂಗಳೂರು: ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೆ ಈ ಬಾರಿ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು.

ರಾಜ್ಯದ ಎಲ್ಲಾ 2359 ಪಿ.ಹೆಚ್.ಸಿಗಳನ್ನು ಸುಸಜ್ಜಿತ ಕಟ್ಟಡವನ್ನೊಳಗೊಂಡಂತೆ ಅವುಗಳ ಸಾಮರ್ಥ್ಯವನ್ನು 12 ಅಥವಾ 20 ಹಾಸಿಗೆಗಳಿಗೆ ಹೆಚ್ಚಿಸಿ ಸಿಬ್ಬಂದಿ ಸಂಖ್ಯೆಯ ಜೊತೆಗೆ ಅತ್ಯಾಧುನಿಕ ಉಪಕರಣಗಳು ಮತ್ತು ಹೆಚ್ಚಿನ ಸೇವೆಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಎಂ.ಬಿ.ಬಿ.ಎಸ್ ಉತ್ತೀರ್ಣರಾದವರು ಕಡ್ಡಾಯವಾಗಿ ಗ್ರಾಮೀಣ ಸೇವೆಯನ್ನು ಮಾಡಬೇಕಿದ್ದು, ಅವರನ್ನು ಪಿ.ಹೆಚ್.ಸಿಗಳಿಗೆ ನೇಮಕ ಮಾಡಿಕೊಂಡು ಸಿಬ್ಬಂದಿ ಕೊರತೆಯನ್ನು ನೀಗಿಸಲಾಗುವುದು ಎಂದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್ ಮಾತನಾಡಿ ಆಂಬ್ಯಲೆನ್ಸ್ ಗಳನ್ನು ಇ-ಲಿಂಕ್ ಮಾಡಿ ಎಲ್ಲೆಡೆ ತ್ವರಿತ ಆರೋಗ್ಯ ಸೇವೆಗಳನ್ನೂ ಒದಗಿಸಬಹುದಾಗಿದೆ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಜಾವೇದ್ ಅಖ್ತರ್ ಅವರು ಪಿ.ಹೆಚ್.ಸಿ ಉನ್ನತೀಕರಣಕ್ಕೆ ಸಂಬಂಧಿಸಿದ ವಿವರಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ರಾಜ್ಯದಲ್ಲಿ ಈಗಾಗಲೇ 951 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಈಗಾಗಲೇ 24*7 ಕಾರ್ಯನಿರ್ವಹಿಸುತ್ತಿದ್ದು ಉಳಿದ ಕೇಂದ್ರಗಳನ್ನು 24*7 ಪಿ.ಹೆಚ್.ಸಿ ಗಳನ್ನಾಗಿ ಪರಿವರ್ತಿಸಲು ಅಗತ್ಯವಿದೆ ಎಂದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು .

SCROLL FOR NEXT