ಬೆಂಗಳೂರು: ಖಾಸಗಿ ಹಾಗೂ ಸರ್ಕಾರಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ರಾಷ್ಟ್ರವ್ಯಾಪ್ತಿ ಅಂತರರಾಜ್ಯ ವಲಸೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದಿಂದ ಕಾನೂನು ಜಾರಿ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.
ನಗರದ ಟೌನ್ ಹಾಲ್ ಬಳಿ ಹಲವು ಕನ್ನಡಪರ ಸಂಘಟನೆಗಳು, ಕರ್ನಾಟಕ ಕೇಂದ್ರೀಯ ರಾಜಕಾರಣ ಪ್ರತಿಭಟನೆ ನಡೆಸಿದ್ದು, ಖಾಸಗಿ ಹಾಗೂ ಸರ್ಕಾರಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ರಾಷ್ಟ್ರವ್ಯಾಪ್ತಿ ಅಂತರರಾಜ್ಯ ವಲಸೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದಿಂದ ಕಾನೂನು ಜಾರಿ ಮಾಡುವಂತೆ ಆಗ್ರಹಿಸಿದ್ದಾರೆ.
ತಮಿಳುನಾಡು, ಆಂಧ್ರಪ್ರದೇಶ ಹಾಗೂ ಇತರೆ ರಾಜ್ಯಗಳಿಂದ ಬರುವವರು ನಮ್ಮ ಕೆಲಸಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಶಾಸಕರ ಹಾಗೂ ಕಾರ್ಪೊರೇಟ್ ಸ್ಥಾನಗಳನ್ನೂ ಕಸಿದುಕೊಳ್ಳುತ್ತಿದ್ದಾರೆ. ವಲಸಿಗರ ತಡೆಯಲು ಕೇಂದ್ರ ಸರ್ಕಾರದಿಂದ ಕಾನೂನು ಜಾರಿಯಾಗಬೇಕಿದೆ ಎಂದು ರಾಷ್ಟ್ರೀಯ ಕಾರ್ಮಿಕ ಮಾನವ ಹಕ್ಕುಗಳ ಭ್ರಷ್ಟಾಚಾರ ವಿರೋಧಿ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಮೋಹನ್ ರಾಜ್ ಒಡೆಯರ್ ಅವರು ಹೇಳಿದ್ದಾರೆ.
ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಪ್ರಾಮುಖ್ಯತೆ ನೀಡಬೇಕು. ಪ್ರಸ್ತುತ ಇರುವ ಪರಿಸ್ಥಿತಿ ಬೇರೆ ರಾಜ್ಯಗಳಿಂದ ಬರುವವರು ನಮ್ಮ ಕೆಲಸವನ್ನು ಕಸಿದುಕೊಳ್ಳುತ್ತಿದ್ದಾರೆ, ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಇಂತಹ ಪರಿಸ್ಥಿತಿ ಏರ್ಪಟ್ಟಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಕನ್ನಡಾಂಬೆ ಹಿತರಕ್ಷಣೆ ವೇದಿಕೆಯ ಅಧ್ಯಕ್ಷ ರಾಜೇಂದ್ರ ಗೌಡ ಅವರು ಹೇಳಿದ್ದಾರೆ.
ಖಾಸಗಿ ಕಂಪನಿಗಳು ಹೊರಗಿನವರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದ್ದು, ನೇಮಕಾತಿಗೂ ಮುನ್ನ ಈ ಬಗ್ಗೆ ಸರ್ಕಾರದ ಅನುಮತಿ ಪಡೆದುಕೊಳ್ಳಬೇಕೆಂಬ ನಿಯಮವನ್ನು ಜಾರಿಗೆ ತರಬೇಕೆಂದು ಇದೇ ವೇಳೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.