ರಾಜ್ಯ

ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ 

Shilpa D

ಬೆಂಗಳೂರು: ರಾಜ್ಯ ಸರಕಾರವು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿರುವ ಡಾ.ಇ.ವಿ.ರಮಣ ರೆಡ್ಡಿಯವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೊಣೆಗಾರಿಕೆಯನ್ನು ವಹಿಸಲಾಗಿದೆ.

ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ರಾಕೇಶ್ ಸಿಂಗ್ ಅವರನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಟಿ.ಎಚ್.ಎಂ.ಕುಮಾರ್ ಅವರನ್ನು ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತ ಹಾಗೂ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ ಅವರನ್ನು ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರಾಗಿದ್ದ ಪಿ.ವಸಂತ ಕುಮಾರ್ ಅವರನ್ನು ಮೈಸೂರು ಶುಗರ್ ಕಂಪೆನಿಯ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.


ಭೂಮಾಪನ ಇಲಾಖೆ ಆಯುಕ್ತ ಮನೀಶ್‌ ಮೌದ್ಗಿಲ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕ ಚಂದ್ರ ಅವರಿಗೆ ಭೂಮಾಪನ ಇಲಾಖೆ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ

SCROLL FOR NEXT