ರಾಜ್ಯ

ಯಾದಗಿರಿ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಆಟೋ; ಸ್ಥಳದಲ್ಲೇ ಮೂವರು ಸಾವು

Shilpa D

ಯಾದಗಿರಿ: ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಗೂಡ್ಸ್ ಆಟೊ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಹಲಗೇರಾ ಗೇಟ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದ ಸಿದ್ದಮ್ಮ ಹಾಗೂ ರಮೇಶ ಮತ್ತು ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಪಾಷಾ ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಸಿದ್ದಮ್ಮ ಮತ್ತು ರಮೇಶ ತಾಯಿ ಮಗ ಎಂದು ತಿಳಿದು ಬಂದಿದೆ.

ತಾಲ್ಲೂಕಿನ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಗೆ ವಿಜಯಪುರದಿಂದ ಕಬ್ಬು ಸಾಗಿಸುತ್ತಿದ್ದ ಲಾರಿಯನ್ನು ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಲಾಗಿತ್ತು. 

ಆಟೋ ಯಾದಗಿರಿಯಿಂದ ವಡೇಗೇರಾದ ಕಡೆ ತೆರೆಳುತ್ತಿತ್ತು. ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು, ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ವಡಗೇರಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

SCROLL FOR NEXT