ರಾಜ್ಯ

ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಯುವಕ ನೊಂದು ಆತ್ಮಹತ್ಯೆಗೆ ಶರಣು

Manjula VN

ಬೆಂಗಳೂರು: ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ 23 ವರ್ಷದ ಯುವಕನೊಬ್ಬ ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಹಳ್ಳಿಯ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. 

ಕನಕಪುರ ಮೂಲದ ನವೀನ್ ಕೆ. ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಎರಡು ತಿಂಗಳ ಹಿಂದಷ್ಟೇ ಅಪಘಾತವತವೊಂದರಲ್ಲಿ ನವೀನ್ ಕಾಲಿನ ಮೂಳೆ ಮುರಿತಗೊಂಡಿತ್ತು. ಘಟನೆ ಬಳಿಕ ನವೀನ್ ತೀವ್ರ ಮಾನಸಿಕ ಖಿನ್ನತೆಗೊಳಗಾಗಿದ್ದ. ಅಪಘಾತದಿಂದ ಉಂಟಾಗ ಗಾಯದಿಂದಾಗಿ ನವೀನ್ ಕೆಲಸಕ್ಕೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಆತ ಇಂತಹ ನಿರ್ಧಾರಕ್ಕೆ ಬಂದಿರಬಹುದು ಎಂದು ನವೀನ್ ಸಂಬಂಧಿಕ ನಾಗರಾಜ್ಅವರು ಹೇಳಿದ್ದಾರೆ. 

ನಗರದಲ್ಲಿ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದ ನವೀನ್, ಡೆಲಿವರಿ ಬಾಯ್ ಹಾಗೂ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಭಾನುವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ತನ್ನ ಮೊಬೈಲ್ ಫೋನ್ ಸ್ವಿಟ್ ಆಫ್ ಮಾಡಿರುವ ನವೀನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂದರ್ಭದಲ್ಲಿ ನವೀನ್ ಅವರ ಪೋಷಕರು ಸಂಪರ್ಕಿಸಲು ಸಾಕಷ್ಟು ಯತ್ನ ನಡೆಸಿದ್ದಾರೆ. 

ಹಲವು ಬಾರಿ ದೂರವಾಣಿ ಕರೆ ಮಾಡಿದರೂ ನವೀನ್ ಫೋನ್ ತೆಗೆಯದ ಹಿನ್ನೆಲೆಯಲ್ಲಿ ಸಂಬಂಧಿಕ ನಾಗರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ನಾಗರಾಜ ನವೀನ್ ಮನೆಗೆ ತರಳಿದ್ದಾರೆ. ಈ ವೇಳೆ ಒಳಗಿನಿಂದ ಬಾಗಿಲು ಲಾಕ್ ಆಗಿರುವುದು ಕಂಡು ಬಂದಿದೆ. ಬಳಿಕ ಕಿಟಕಿಯಿಂದ ನೋಡಿದಾಗ ನವೀನ್ ಆತ್ಮಹತ್ಯೆಗೆ ಶರಣಾಗಿರುವುದು ಕಂಡು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಕೂಡಲೇ ನಾಗರಾಜ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ. 

SCROLL FOR NEXT