ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 30 ಬಲಿ, ಬೆಂಗಳೂರಿನಲ್ಲಿ 981 ಸೇರಿ 1843 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 30 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 402ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 10 ಮಂದಿ ಸೇರಿದಂತೆ ರಾಜ್ಯದಲ್ಲಿ ಒಟ್ಟು 30 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 981 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 1843 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 25317ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 15,880 ಕೊರೊನಾ ಟೆಸ್ಟ್ ಮಾಡಲಾಗಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಟೆಸ್ಟ್ ಪ್ರಮಾಣ ಕಡಿಮೆಯಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಸೋಮವಾರ 680 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 10527ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 14385 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 279 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 981, ಬಳ್ಳಾರಿ 99, ಉತ್ತರ ಕನ್ನಡ 81, ಬೆಂಗಳೂರು ಗ್ರಾಮಾಂತರ 68, ಧಾರವಾಡ 56, ಕಲಬುರಗಿ 53, ಹಾಸನ 49, ಮೈಸೂರು 45, ಬೀದರ್ 44, ಉಡುಪಿ 40, ಮಂಡ್ಯ 39, ವಿಜಯಪುರ 36, ಬಾಗಲಕೋಟೆ 33, ತುಮಕೂರು 31, ಯಾದಗಿರಿ 35, ಶಿವಮೊಗ್ಗ 24, ಗದಗ 18, ಚಾಮರಾಜನಗರ 12, ರಾಮನಗರ 11, ಕೋಲಾರ 10, ರಾಯಚೂರು 6, ಚಿತ್ರದುರ್ಗ 6, ದಾವಣಗೆರೆ 3, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ತಲಾ 2 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

SCROLL FOR NEXT