ಬೆಂಗಳೂರು: ಲಾಕ್ ಡೌನ್ ನಂತರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಜನರು ಬಂದಿದ್ದೇ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಲು ಕಾರಣ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ರಾಜ್ಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗಲು ಕಾರಣ ಏನು ಎಂಬುವುದನ್ನು ತಿಳಿಸಿದ್ದಾರೆ. ಕೋವಿಡ್19 ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಾಲಕಾಲಕ್ಕೆ ತ್ವರಿತವಾಗಿ ಅನೇಕ ಉಪಕ್ರಮಗಳನ್ನು ಕೈಗೊಳ್ಳುತ್ತಲೇ ಬಂದಿದೆ. ಲಾಕ್ ಡೌನ್ ತೆರವು ಮಾಡಿದ ನಂತರ ಹೊರ ರಾಜ್ಯಗಳಿಂದ ಹೆಚ್ಚು ಜನ ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹೆಚ್ಚಿತು ಎಂದು ಟ್ವೀಟ್ ಮಾಡಿದ್ದಾರೆ.
ಮೊದಲನೇ ಹಂತದ ಸಂಪೂರ್ಣ ಲಾಕ್ಡೌನ್ ತೆರವಿನ ಬಳಿಕ ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಹೊರರಾಜ್ಯಗಳಲ್ಲಿ ಸಿಕ್ಕಿಹಾಕಿಕೊಂಡಿದ್ದ ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಲಾಗಿತ್ತು. ಕೆಲವು ಕಡೆ ಲ್ಯಾಬ್ ಟೆಕ್ನೀಷಿಯನ್ ಗಳು ಸೋಂಕಿಗೆ ತುತ್ತಾಗಿದ್ದರಿಂದ ಲ್ಯಾಬ್ ಗಳನ್ನು ಸೀಲ್ ಮಾಡಲಾಯಿತು. ಇದರಿಂದ ಪರೀಕ್ಷೆ ಮಾಡಲು ತೊಂದರೆಯಾಯಿತು. ಈ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣದಲ್ಲಿ ಹೆಚ್ಚಳ ಹಾಗೂ ಜಿಲ್ಲಾ ಮಟ್ಟದಲ್ಲಿ ಲ್ಯಾಬ್ ಗಳ ಸಂಖ್ಯೆಯನ್ನು ಜಾಸ್ತಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.