ಬೆಂಗಳೂರು: ರಾಜ್ಯದಲ್ಲಿ ಕಳೆದ 2 ವಾರಗಳಿಂದ ಆರೋಗ್ಯ ಸಿಬ್ಬಂದಿ, ಪೊಲೀಸರು, ಸಾರ್ವಜನಿಕ ಸಾರಿಗೆ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರಲ್ಲಿ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ವಿಭಾಗದ 40 ಸಾವಿರ ಮಂದಿಗೆ ರ್ಯಾಂಡಮ್ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.
ಕಳೆದ ಎರಡು ವಾರದಿಂದ ಪೊಲೀಸರು, ಆಟೋ ರಿಕ್ಷಾ ಚಾಲಕರು, ಬೀದಿ ಬದಿ ವ್ಯಾಪಾರಿಗಳು, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಸಿಬ್ಬಂದಿಯಲ್ಲಿ ಹಲವರಲ್ಲಿ ಸೋಂಕು ಪತ್ತೆಯಾಗಿದೆ.
ಕೆಲ ವಲಯಗಳಲ್ಲಿ ಕಾರ್ಯನಿರ್ವಹಿಸುವವರಿಗೆ ರ್ಯಾಂಡಂ ಸ್ಯಾಂಪರ್ ಪರೀಕ್ಷೆ ನಡೆಸುವ ಕುರಿತು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ.
ಕೊಳಗೇರಿ ನಿವಾಸಿಗಳು, ಆಹಾರ ಹಾಗೂ ಕೊರಿಯರ್ ವಿತರಣಾ ಸಿಬ್ಬಂದಿ, ಮಾರುಕಟ್ಟೆ, ಸೂಪರ್ ಮಾರ್ಕೆಟ್ ಹಾಗೂ ಮಾಲ್ ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ರಸ್ತೆ ಬದಿ ವ್ಯಾಪಾರಿಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ 50 ವರ್ಷಕ್ಕಿಂಟ ಮೇಲ್ಪಟ್ಟು ವಯಸ್ಸಿನವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸ್ಥಳೀಯ ತಜ್ಞರ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿ ಪರೀಕ್ಷೆಯ ಮಾರ್ಗಸೂಚಿ ಅನ್ವಯ ಸ್ಥಳಗಳು ಹಾಗೂ ವ್ಯಕ್ತಿಗಳನ್ನು ಗುರುತಿಸಿ ಪರೀಕ್ಷೆ ನಡೆಸಬೇಕು ಎಂದಿದ್ದಾರೆ.