ರಾಜ್ಯ

ಕೊರೋನಾ ಆತಂಕದ ನಡುವೆಯೂ ಶೇ. 2 ರಷ್ಟು ಹೆಚ್ಚು ವಿದ್ಯಾರ್ಥಿಗಳಿಂದ ಪಿಯು ಪರೀಕ್ಷೆ: ಸುರೇಶ್ ಕುಮಾರ್

Lingaraj Badiger

ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ರಾಜ್ಯದೆಲ್ಲೆಡೆ ಯಾವುದೇ ತೊಂದರೆಗಳಿಲ್ಲದೇ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಯಶಸ್ವಿಯಾಗಿ ನಡೆದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕೊರೋನಾ ಸೋಂಕು ನಡುವೆಯೂ ಶೇ. 2 ರಷ್ಟು ಹೆಚ್ಚು ವಿದ್ಯಾರ್ಥಿಗಳು ಇಂಗ್ಲಿಷ್ ಪರೀಕ್ಷೆ ಬರೆದಿದ್ದಾರೆ.

ಕಳೆದ ವರ್ಷ ನಡೆದ ಇಂಗ್ಲಿಷ್ ಪರೀಕ್ಷೆಗೆ 6,71,635 ವಿದ್ಯಾರ್ಥಿಗಳ ಪೈಕಿ 6,34,993 ವಿದ್ಯಾರ್ಥಿಗಳು ಹಾಜರಾಗಿದ್ದರು. 36,642 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಕಳೆದ ಸಾಲಿನ ಹಾಜರಾತಿ ಶೇ. 94.54 ಇದ್ದು, ಈ ಬಾರಿ ಶೇ. 96.03 ರಷ್ಟು ಇದೆ. ಕಳೆದ ಬಾರಿಗಿಂತ ಶೇ. 2 ರಷ್ಟು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ವಿಶೇಷವಾಗಿದೆ. 
ಪರೀಕ್ಷಾ ವ್ಯವಸ್ಥೆ ಕುರಿತಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಇಟ್ಟಿರುವ ಭರವಸೆಗೆ ಇದು ಸಾಕ್ಷಿಯಾಗಿದ್ದು, ಇದು ನಮಗೆ ಅತ್ಯಂತ ಖುಷಿಯ ಸಂಗತಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಗ್ಲಿಷ್ ಪರೀಕ್ಷೆಗೆ ಕಲಾ ವಿಭಾಗದಿಂದ 172350, ವಾಣಿಜ್ಯ 234926, ವಿಜ್ಞಾನ 188721 ಒಟ್ಟು 5,96,300 ಹಾಜರಾಗಬೇಕಿದ್ದು, ಇಂದು ರಾಜ್ಯಾದ್ಯಂತ 32 ಜಿಲ್ಲೆಗಳಲ್ಲಿ 5,72,665 ವಿದ್ಯಾರ್ಥಿಗಳು ಬರೆದಿದ್ದು, 23,635 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕಲಬುರ್ಗಿ ಜಿಲ್ಲೆಯಲ್ಲಿ ಗರಿಷ್ಠ 1748 ವಿದ್ಯಾರ್ಥಿಗಳು ಹಾಗೂ ಕೊಡಗು ಜಿಲ್ಲೆಯಲ್ಲಿ ಕನಿಷ್ಠ 99 ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರ ಉಳಿದಿದ್ದರು. ಗೈರು ಹಾಜರಿಯ ಕಾರಣವನ್ನು ಗುರುತಿಸಿ ಮುಂದೆ ಅವರು ಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಅಂತಹ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಹಾಜರಾಗಬಹುದಾಗಿದೆ. ಇದರಿಂದ ಯಾವುದೇ ವಿದ್ಯಾರ್ಥಿ ಪೋಷಕರು ಆತಂಕ ಪಡಬೇಕಾಗಿಲ್ಲ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಹಲವಾರು ಮಂದಿ ತಮಗಾಗಿ ವಿಶೇಷವಾಗಿ ನಿಗದಿಪಡಿಸಿದ್ದ ಖಾಸಗಿ ಇಲ್ಲವೇ ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಂದಿದ್ದರು. ಬಸ್ ಸೌಲಭ್ಯವಿದ್ದ ಮಾರ್ಗಗಳ ವಿದ್ಯಾರ್ಥಿಗಳು ಮಾರ್ಗ ದ ಬಸ್ ಗಳಲ್ಲಿ ಬಂದರು. ಯಾವುದೇ ಪರೀಕ್ಷಾ ಕೇಂದ್ರಗಳಿಗೆ ಬಸ್ ಸೌಲಭ್ಯ ದೊರಕದೇ ಯಾವೊಬ್ಬ ವಿದ್ಯಾರ್ಥಿಗೂ ಯಾವುದೇ ಸಮಸ್ಯೆಯಾಗಿಲ್ಲ. ಆಂಗ್ಲಭಾಷಾ ವಿಷಯ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸಾರಿಗೆ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಬರಲು ತಮ್ಮ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಸಾರಿಗೆ ಇಲಾಯಿಂದ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದರು.

ರಾಜ್ಯದಲ್ಲಿ ಒಟ್ಟು 1016 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಜಿಲ್ಲಾ ಕೇಂದ್ರಗಳಲ್ಲಿ 430 ಪರೀಕ್ಷಾ ಕೇಂದ್ರಗಳು, ತಾಲೂಕು ಕೇಂದ್ರಗಳಲ್ಲಿ 328 ಹಾಗೂ ಹೋಬಳಿ ಕೇಂದ್ರಗಳಲ್ಲಿ 258 ಪರೀಕ್ಷಾ ಕೇಂದ್ರಗಳು ಕಾರ್ಯನಿರ್ವಹಿಸಿವೆ. ಜಿಲ್ಲೆಗಳಿಂದ ಬೇರೆ ಜಿಲ್ಲೆಗಳಿಗೆ 18529 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡು ಬದಲಾದ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದಾರೆ. ಹೊರ ರಾಜ್ಯಗಳಿಂದ 1889 ವಿದ್ಯಾರ್ಥಿಗಳು ರಾಜ್ಯಕ್ಕೆ ಆಗಮಿಸಿದ್ದರು. ಈ ವಿದ್ಯಾರ್ಥಿಗಳು ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬಂದು ಆಂಗ್ಲಭಾಷಾ ವಿಷಯಕ್ಕೆ ಪರೀಕ್ಷೆ ಬರೆಯುವರಿಗೆ ಅವರು ಆಯ್ಕೆ ಮಾಡಿಕೊಂಡ ಜಿಲ್ಲಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಗಡಿ ಭಾಗದ ಜಿಲ್ಲೆಗಳಲ್ಲಿ ಪರೀಕ್ಷೆಗೆ ಹಾಜರಾಗಲು ಅವಕಾಶ ಮಾಡಿಕೊಡಲಾಗಿತ್ತು. ಇದಕ್ಕಾಗಿ ಸದರಿ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ಕರ್ನಾಟಕಕ್ಕೆ ಬರಲು ವಿಶೇಷ ಪಾಸ್ ಗಳನ್ನು ನೀಡಲಾಗಿತ್ತು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಕೋವಿಡ್-19 ಹಿನ್ನೆಲೆಯಲ್ಲಿ ಈ 1016 ಪರೀಕ್ಷಾ ಕೇಂದ್ರಗಳಲ್ಲಿ ಈ ಹಿಂದೆ ಇದ್ದ 23,064 ಕೊಠಡಿಗಳನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಹೆಚ್ಚುವರಿಯಾಗಿ 13,528 ಕೊಠಡಿಗಳನ್ನು ಸೇರ್ಪಡೆ ಮಾಡಿ 36,592 ಕೊಠಡಿಗಳನ್ನು ಬಳಸಿ ಪರೀಕ್ಷೆಗಳನ್ನು ಸೂಕ್ತ ಸಾಮಾಜಿಕ ಅಂತರ ಕಾಯ್ದುಕೊಂಡು ನಿರ್ವಹಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಹಾಗೂ ಹೆಚ್ಚುವರಿ ಬ್ಲಾಕ್ ಗಳನ್ನು ಮತ್ತು ಕಟ್ಟಡದ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಜ್ ಮಾಡಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ತುರ್ತು ಸಂದರ್ಭಗಳಿಗಾಗಿ ಮಾತ್ರ ಬೇಸಿಕ್ ಮೊಬೈಲ್ ಸೆಟ್(ಕ್ಯಾಮರಾ ಇಲ್ಲದಿರುವ)ನ್ನು ಬಳಸಲು ಅನುಮತಿ ನೀಡಿದ್ದು, ಉಳಿದಂತೆ ಯಾರೂ ಮೊಬೈಲ್ ಗಳನ್ನು ತೆಗೆದುಕೊಂಡು ಹೋಗದಂತೆ ನಿಷೇಧಿಸಲಾಗಿತ್ತು. ಅಂತೆಯೇ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವಾಗಿ ಸ್ಥಳೀಯ ಜಿಲ್ಲಾಡಳಿತ ಘೋಷಣೆ ಮಾಡಲಾಗಿತ್ತು. ಈ ಕಾರ್ಯಕ್ಕಾಗಿ ಅಗತ್ಯವಿರುವ ಕಡೆ ಹೆಚ್ಚುವರಿ ಸಿಬ್ಬಂದಿ ಬಳಸಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಕೊಠಡಿಗೆ ಹಾಜರಾಗುವ ಮುನ್ನ ಹಾಗೂ ಪರೀಕ್ಷೆ ನಂತರ ನಿರ್ಗಮಿಸುವ ಸಂದರ್ಭದಲ್ಲಿ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವ ಕುರಿತಂತೆ ಎಲ್ಲ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲಾಗಿದೆ ಎಂದು ಸಚಿವರು ವಿವರಿಸಿದರು. 

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಿದ್ದು, ಕಂಟೈನ್ಮೆಂಟ್ ವಲಯಗಳಿಂದ ಹಾಜರಾಗುವ ವಿದ್ಯಾರ್ಥಿಗಳಿಗೆ ಒಂದು ವಿಶೇಷ ಕೊಠಡಿ ಹಾಗೂ ಇತರೆ ಅನಾರೋಗ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಒಂದು ಪ್ರತ್ಯೇಕ ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಕಂಟೈನ್ಮೆಂಟ್ ವಲಯಗಳಿಂದ ರಾಜ್ಯಾದ್ಯಂತ ಒಟ್ಟು 223 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲ ವಿದ್ಯಾರ್ಥಿಗಳು ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಲಭ್ಯವಿದ್ದ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದಾರೆ. ಜ್ವರ, ನೆಗಡಿಯಂತಹ ಇತರೆ ಅನಾರೋಗ್ಯಕ್ಕೆ ಒಳಗಾದ ರಾಜ್ಯದ ವಿವಿಧೆಡೆಯ 20 ವಿದ್ಯಾರ್ಥಿಗಳು ತಮಗೆ ಮೀಸಲಾದ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆದಿದ್ದಾರೆಂದು ಸಚಿವರು ತಿಳಿಸಿದರು. 

ಈ ದಿನ ನಡೆದ ಇಂಗ್ಲಿಷ್ ಭಾಷಾ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿ ನಕಲು ಮಾಡಿ ಸಿಕ್ಕಿಬಿದ್ದ ನಿದರ್ಶನಗಳಿಲ್ಲ. ಯಾವುದೇ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯೂ ಆಗಿಲ್ಲ. ಈ ಪರೀಕ್ಷೆ ನಮಗೆ ಜೂ. 25ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಂದು ಅಗ್ನಿ ಪರೀಕ್ಷೆಯಂತೆ ಇತ್ತು. ಇದೇ ರೀತಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಸಹ ಆರೋಗ್ಯಕರ ವಾತಾವರಣದಲ್ಲಿ ನಡೆಯಲಿದೆ. ಆರೋಗ್ಯ, ಸಾರಿಗೆ, ಗೃಹ ಇಲಾಖೆ ಸೇರಿದಂತೆ ಆಯಾ ಭಾಗದ ಸ್ಥಳೀಯ ಸಂಸ್ಥೆಗಳ ನೆರವಿನೊಂದಿಗೆ ನಡೆದ ಪರೀಕ್ಷೆಯಲ್ಲಿ ಮಕ್ಕಳು ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆದಿದ್ದಾರೆಂದು ಸಚಿವರು ತಿಳಿಸಿದರು.

ಸಾಮಾಜಿಕ‌ಅಂತರ ಕಾಯ್ದುಕೊಳ್ಳುವಲ್ಲಿ ವಿಫಲರಾಗಿರುವ ಕೆಲ ಪರೀಕ್ಷಾ ಕೇಂದ್ರಗಳ ಸಿಬ್ಬಂದಿಯ ಮೇಲೆ ಕ್ರಮ ವಹಿಸಲು ಸೂಚಿಸಲಾಗಿದೆ. ಇದೇ ಸಂದರ್ಭದಲ್ಲಿ. 39 ವಿಷಯಗಳ ಪೈಕಿ 26 ವಿಷಯಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆಯಿಂದ ಪುನರ್ ಪ್ರಾರಂಭವಾಗಲಿರುವ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಉಪನ್ಯಾಸಕ‌ ವೃಂದ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು. ಇಂಗ್ಲಿಷ್ ಭಾಷಾ ಉತ್ತರ ಪತ್ರಿಕೆಗಳ ಕುರಿತಂತೆ ವಿಕೇಂದ್ರೀಕೃತ ಮೌಲ್ಯಮಾಪನ ವ್ಯವಸ್ಥೆ ಜಾರಿ ಮಾಡಲಾಗುವುದೆಂದರು.

ಸುದ್ದಿಗೋಷ್ಠಿಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ. ಎಂ.ಟಿ. ರೇಜು ಹಾಜರಿದ್ದರು.

SCROLL FOR NEXT