ರಾಜ್ಯ

ಹುಬ್ಬಳ್ಳಿ: ನಾಡೋಜ ಪಾಟೀಲ ಪುಟ್ಟಪ್ಪ ವಿಧಿವಶ, ಗಣ್ಯರ ಸಂತಾಪ

Nagaraja AB

ಹುಬ್ಬಳ್ಳಿ: ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಪಾಟೀಲ ಪುಟ್ಟಪ್ಪ ನಿಧನರಾಗಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ. ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.

1921 ಜನವರಿ 14ರಂದು ಧಾರವಾಡ ಜಿಲ್ಲೆಯ ಹಾವೇರಿ ತಾಲೂಕು ಕುರಬಗೊಂಡದಲ್ಲಿ ಜನಿಸಿದ್ದ ಪಾಟೀಲ ಪುಟ್ಟಪ್ಪ,  'ಪಾಪು' ಎಂದೇ ಖ್ಯಾತರಾಗಿದ್ದರು. 70ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಪಾಟೀಲ ಪುಟ್ಟಪ್ಪ, ಕನ್ನಡ ನಾಡು ನುಡಿಗೆ ಅಪಾರ ಕೊಡುಗೆ ನೀಡಿದ್ದಾರೆ.

ಡಾ. ಪಾಟೀಲ ಪುಟ್ಟಪ್ಪ  ಹಲವಾರು ಕನ್ನಡಪರ ಹೋರಾಟಗಳ ನೇತೃತ್ವವನ್ನು ವಹಿಸಿದ್ದರು. ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡದ ಅಸ್ಮಿತೆಗಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು.

ಶತಾಯುಷಿ ಪಾಟೀಲ ಪುಟ್ಟಪ್ಪ ಸ್ವಾತಂತ್ರ್ಯ ಹೋರಾಟಗಾರರಾಗಿ ಪತಿಕ್ರೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡಪರ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಎರಡು ಅವಧಿಗೆ ರಾಜ್ಯಸಭಾ ಸದಸ್ಯರಾಗಿ, ಕನ್ನಡ ಕಾವಲು ಮತ್ತು ಗಡಿ ಸಲಹಾ ಸಮಿತಿ ಸಂಸ್ಥಾಪನಾ ಅಧ್ಯಕ್ಷ, ಅಖಿಲ ಕರ್ನಾಟಕ ಹೋರಾಟ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಟಿಎಸ್ ಆರ್ ಪತ್ರಿಕಾ ಪ್ರಶಸ್ತಿ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಪಾಟೀಲ ಪುಟ್ಟಪ್ಪು ಭಾಜನರಾಗಿದ್ದರು.

ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,  ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಮಂದಿ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. 

SCROLL FOR NEXT