ರಾಜ್ಯ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ್ ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಯತ್ನಿಸಿಲ್ಲ: ಡಿ.ಕೆ. ಶಿವಕುಮಾರ್

Manjula VN

ಉಡುಪಿ:  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಅವರು ಆರ್ಥಿಕ ಸಂಕಷ್ಟಗಳಿಂದ ಆತ್ಮಹತ್ಯೆಗೆ ಯತ್ನಿಸಿಲ್ಲ. ಆರ್ಥಿಕ ಸಂಕಷ್ಟ ಕಾರಣವಲ್ಲ ಎಂದಾದರೆ, ರಾಜಕೀಯ ಒತ್ತಡಗಳೇ ಕಾರಣವಾಗಿರಬಹುದು ಎಂದು ಹೇಳಿದ್ದಾರೆ. 

ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿರುವುದಕ್ಕೆ ಕಾರಣವಾಗಿರುವ ವಿಡಿಯೋ ನನ್ನ ಬಳಿಯಿಲ್ಲ. ಆದರೆ, ರಾಜಕೀಯ ವಲಯದಲ್ಲಿ ಸಾಕಷ್ಟು ಡೀಲ್ ಗಳನ್ನು ಸಂತೋಷ್ ಮಾಡುತ್ತಿದ್ದರು. ರಾಜಕೀಯ ಒತ್ತಡಗಳಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಸಂತೋಷ್ ಅವರ ಪತ್ನಿಯೇ ಹೇಳಿಕೊಂಡಿದ್ದಾರೆಂದು ತಿಳಿಸಿದ್ದಾರೆ. 

ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದೇಕೆ?
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿರುವುದು ಗಂಭೀರ ವಿಚಾರ. ತಮಗೆ ಮಾಧ್ಯಮದವರು ಹಾಗೂ ಸ್ನೇಹಿತರುಗಳು ಎರಡು ಮೂರು ತಿಂಗಳ ಹಿಂದೆಯೇ ನೀಡಿದ್ದ ಮಾಹಿತಿಯನ್ನು ಜನರ ಮುಂದೆ ಇಟ್ಟಿದ್ದೇನೆ. ತಾವು ಯಾರ ಹೆಸರನ್ನೂ ಹೇಳಿಲ್ಲ. ಆದರೆ ಅವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದೇಕೆ?' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

'ತಮ್ಮ ಬಳಿ ಸಾಕ್ಷಿ ಇದೆ. ತಾವು ಬಿಡುಗಡೆ ಮಾಡುತ್ತೇನೆ ಎಂದು ಹೇಳಿಲ್ಲ. ಈ ಹಿಂದೆ ರಾಜಕೀಯ ಕಾರ್ಯದರ್ಶಿಯನ್ನು ವಜಾ ಮಾಡಿದ್ದರು, ಕೆಲವು ದಿನಗಳ ಹಿಂದೆ ಮಾಧ್ಯಮ ಸಲಹೆಗಾರರು ರಾಜೀನಾಮೆ ನೀಡಿದ್ದಾರೆ. ಈಗ ಅವರ ಆಪ್ತ ಹಾಗೂ ಅವರ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂದರೆ ಅದು ಜವಾಬ್ದಾರಿಯುತ ಸ್ಥಾನ. ಅವರ ಹೆಸರು ಅನೇಕ ವಿಚಾರದಲ್ಲಿ ಕೇಳಿಬಂದಿವೆ. ಹೀಗಾಗಿ ತಮಗೆ ಬಂದ ಮಾಹಿತಿ ತಿಳಿಸಿದ್ದೇನೆ' ಎಂದರು.

'ಸಂತೋಷ್ ಅವರ ಪತ್ನಿ ಇದಕ್ಕೂ ಕುಟುಂಬಕ್ಕೂ ಸಂಬಂಧ ಇಲ್ಲ. ರಾಜಕೀಯ ಒತ್ತಡದಿಂದ ಈ ಪ್ರಯತ್ನ ಮಾಡಿರಬೇಕು ಎಂದು ಹೇಳಿದ್ದಾರೆ. ಅಂತಹ ಒತ್ತಡ ಅವರ ಮೇಲೆ ಏನಿತ್ತು? ಅವರನ್ನು ಯಾರಾದರೂ ಬೆದರಿಸುತ್ತಿದ್ದರೆ? ಅವರ ಹೆಸರಿಗೆ ಕಳಂಕ ತರುವಂತಹದ್ದು ಏನಾದರೂ ಇದೆಯೇ? ಅವರ ಮೇಲೆ ಇರುವ ರಾಜಕೀಯ ಒತ್ತಡ ಏನು ಎಂಬುದು ಜನರಿಗೆ ಗೊತ್ತಾಗಬೇಕು' ಎಂದರು. 

SCROLL FOR NEXT