ರಾಜ್ಯ

ರಾಜ್ಯದಲ್ಲಿ ಶೀಘ್ರದಲ್ಲೇ ಸೈಬರ್ ಸುರಕ್ಷತಾ ನೀತಿ: ಡಿಸಿಎಂ ಅಶ್ವತ್ಥ್ ನಾರಾಯಣ

Manjula VN

ಬೆಂಗಳೂರು: ತಂತ್ರಜ್ಞಾನ ಬೆಳವಣಿಗೆಯಿಂದ ಡಿಜಿಟಲ್ ವ್ಯವಹಾರಗಳು ಜಾಸ್ತಿಯಾಗುವ ಜೊತೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೈಬರ್ ಸುರಕ್ಷತಾ ಕಾರ್ಯನೀತಿ ರೂಪಿಸಲು ಸರ್ಕಾರ ಚಾಲನೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಐಟಿ,ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮೊದಲ ಬಾರಿಗೆ ಆಯೋಜಿಸಿದ್ದ ಸೈಬರ್ ಸುರಕ್ಷತಾ ಮಾಸ ಉದ್ಘಾಟನಾ ಸಮಾರಂಭದಲ್ಲಿ ಸೈಬರ್ ಸುರಕ್ಷತಾ ಲಾಂಛನಗಳನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ತಂತ್ರಜ್ಞಾನದ ಅಭಿವೃದ್ಧಿಯ ಪರಿಣಾಮ ಜನರಿಗೆ ಸೇವೆಯನ್ನು ತ್ವರಿತವಾಗಿ ತಲುಪಿಸಲು ಮಾಹಿತಿ ತಂತ್ರಜ್ಞಾನ ಆಧಾರಿತ ತಂತ್ರೋಪಾಯಗಳ ಅಳವಡಿಕೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಸೈಬರ್ ಅಪರಾಧಗಳು ಕೂಡ ಗಣನೀಯವಾಗಿ ಅಧಿಕವಾಗುವ ಅಪಾಯ ಇರುವುದರಿಂದ ಸಾರ್ವಜನಿಕರು ಹಾಗೂ ಸರ್ಕಾರದ ಹಿತ ಕಾಪಾಡಲು ಸುರಕ್ಷತಾ ಕಾರ್ಯನೀತಿ ರೂಪಿಸಲಾಗುವುದು ಎಂದು ಹೇಳಿದ್ದಾರೆ. 

ದೇಶದ ಸಿಲಿಕಾನ್ ಕಣಿವೆ ಎಂದೆ ಹೆಸರಾಗಿರುವ ಬೆಂಗಳೂರು ಸಹಜವಾಗಿ ಸೈಬರ್ ಅಪರಾಧಿ ಮುಖ್ಯ ಗುರಿಗಳಲ್ಲಿ ಒಂದಾಗಿದೆ. ಆದ್ದರಿಂದ ಸೈಬರ್ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಜಾಗತಿಕವಾಗಿ ಅಕ್ಟೋಬರ್ ತಿಂಗಳನ್ನು ಸೈಬರ್ ಸುರಕ್ಷತಾ ಮಾಸ ಆಚರಿಸಲಾಗುತ್ತಿದೆ. ಅದರಂತೆ ರಾಜ್ಯದಲ್ಲಿ ಈ ಬಾರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. 

SCROLL FOR NEXT