ರಾಜ್ಯ

ಪ್ರವಾಸಿಗರಿಂದ ಸೋಂಕು ಹರಡದಂತೆ ನೋಡಿಕೊಳ್ಳಲು ಮಾರ್ಗಸೂಚಿ, ಸದ್ಯಕ್ಕೆ ಶಾಲೆ ಆರಂಭ ಇಲ್ಲ: ಸುಧಾಕರ್

Lingaraj Badiger

ಮಡಿಕೇರಿ: ಕೊಡಗು ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಂದ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ನೂತನ ಮಾರ್ಗಸೂಚಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮಡಿಕೇರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಬಳಿಕ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.

"ದಸರಾ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವಾಸಿಗರು ಬರುತ್ತಾರೆ‌. ಎಲ್ಲ ಪ್ರವಾಸಿಗರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಬೇಕು. ಪ್ರವಾಸಿ ತಾಣಗಳಲ್ಲಿ ಪೊಲೀಸ್, ಕಂದಾಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಿ ಆರೋಗ್ಯ ತಪಾಸಣೆ ಸಹಿತ ಇತರೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಮಾರ್ಗಸೂಚಿ ಸಿದ್ಧಪಡಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ" ಎಂದು ಸಚಿವರು ತಿಳಿಸಿದರು.

ಶಾಲೆಗಳನ್ನು ಪುನರಾರಂಭಿಸುವ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯವು ಮಾರ್ಗಸೂಚಿ ಪ್ರಕಟಿಸಿದ್ದರೂ ರಾಜ್ಯದಲ್ಲಿ ಕೋವಿಡ್‌–19 ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವ ಚಿಂತನೆ ರಾಜ್ಯ ಸರ್ಕಾರದ ಮುಂದೆ ಇಲ್ಲ’ ಎಂದು ಸುಧಾಕರ್‌ ಹೇಳಿದರು.

‘ಕೊರೋನಾದ ಮಧ್ಯಂತರ ಅವಧಿಯಲ್ಲಿ ರಾಜ್ಯವಿದೆ. ಎರಡು ತಿಂಗಳಿಂದ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಶಾಲೆ ಆರಂಭಿಸುವ ಕುರಿತು ತಜ್ಞರ ಸಲಹೆ ಪಡೆಯಲಾಗಿದ್ದು, ಶಾಲೆ ಆರಂಭಿಸುವುದಕ್ಕೆ ಇದು ಸೂಕ್ತ ಸಮಯವಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ, ಇನ್ನೂ ಮೂರು ವಾರಗಳ ಕಾಲ ಪರಿಸ್ಥಿತಿ ಅವಲೋಕಿಸಲಾಗುವುದು. ಬಳಿಕ, ಪಕ್ಕದ ರಾಜ್ಯಗಳ ಪರಿಸ್ಥಿತಿ ಗಮನಿಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

SCROLL FOR NEXT