ರಾಜ್ಯ

ಸುರೇಶ್ ಅಂಗಡಿ ನಿವಾಸಕ್ಕೆ ಮುಖ್ಯಮಂತ್ರಿ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ

Manjula VN

ಬೆಳಗಾವಿ: ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ನಿವಾಸದಲ್ಲಿ, ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳಾ, ಪುತ್ರಿಯರಾದ ಶ್ರದ್ಧಾ, ಸ್ಫೂರ್ತಿ ಅವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು.

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇದ್ದರು.

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ನ್ಯಾಯಾಂಗ ನಿಂದನೆ ಅರ್ಜಿ ಹಾಕಿರುವ ಕುರಿತು ಪ್ರತಿಕ್ರಿಯಿಸಲು ಮುಖ್ಯಮಂತ್ರಿ ನಿರಾಕರಿಸಿದರು.

ಇದಕ್ಕೂ ಮೊದಲು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನವದೆಹಲಿಯಲ್ಲಿ ಸುರೇಶ್ ಅಂಗಡಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಅಗತ್ಯ ಅನುದಾನ ನೀಡಲಾಗುವುದು. ಅವರ ಸ್ಮಾರಕ ನಿರ್ಮಿಸುವುದು ನನ್ನ ಕರ್ತವ್ಯವಾಗಿದೆ ಎಂದರು

ನಾಲ್ಕು ಬಾರಿ ಸಂಸದರಾಗಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅಪಾರ ಕೊಡುಗೆಯನ್ನು ಅವರು ನೀಡಿದ್ದಾರೆ ಎಂದು ಸ್ಮರಿಸಿದರು.

SCROLL FOR NEXT