ರಾಜ್ಯ

ರಾಷ್ಟ್ರೀಯ ನವೋದ್ಯಮ ಸ್ಪರ್ಧೆ: 15 ಪ್ರಶಸ್ತಿಗಳೊಂದಿಗೆ ಕರ್ನಾಟಕಕ್ಕೆ ಅಗ್ರಸ್ಥಾನ - ಅಶ್ವತ್ಥ ನಾರಾಯಣ

Lingaraj Badiger

ಬೆಂಗಳೂರು: ರಾಷ್ಟ್ರೀಯ ನವೋದ್ಯಮ ಪ್ರಶಸ್ತಿಗಳಿಗಾಗಿ “ನವೋದ್ಯಮ ಭಾರತ” ವತಿಯಿಂದ ಇತ್ತೀಚೆಗೆ ನಡೆಸಲಾಗಿದ್ದ ಸ್ಪರ್ಧೆಗೆ ಕರ್ನಾಟಕದಿಂದ ಅತ್ಯಧಿಕ ಅರ್ಜಿಗಳು ಸಲ್ಲಿಕೆಯಾಗುವ ಜೊತೆಗೆ ಇಲ್ಲಿನ ಹಲವಾರು ನವೋದ್ಯಮಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿವೆ ಎಂದು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಹೇಳಿದ್ದಾರೆ.

ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳಿಗೆ ಪಾತ್ರವಾಗಿರುವ 36 ನವೋದ್ಯಮಗಳ ಪೈಕಿ ರಾಜ್ಯದ 14 ನವೋದ್ಯಮಗಳು ಹಾಗೂ 1 ವೇಗವರ್ಧಕ(ಆಕ್ಸಲರೇಟರ್) ಸೇರಿವೆ ಎಂದು ಡಿಸಿಎಂ ತಿಳಿಸಿದ್ದಾರೆ.

ಈ ಸ್ಪರ್ಧೆಗೆ ದೇಶದಾದ್ಯಂತ ಇರುವ ನವೋದ್ಯಮಗಳಿಂದ ಸಲ್ಲಿಕೆಯಾಗಿದ್ದ 1641 ಅರ್ಜಿಗಳ ಪೈಕಿ 418 ಅರ್ಜಿಗಳು ಕರ್ನಾಟಕದಿಂದ ಸಲ್ಲಿಕೆಯಾಗಿದ್ದವು. ಇದು ಒಟ್ಟಾರೆ ಸಲ್ಲಿಕೆಯಾದ ಅರ್ಜಿಗಳ ಪೈಕಿ ಶೇ. 26ರಷ್ಟಿರುವುದು ಗಮನಾರ್ಹ ಅಂಶ ಎಂದು ಅಶ್ವತ್ಥ ನಾರಾಯಣ ಅವರು ಹೇಳಿದ್ದಾರೆ.

ಕೃಷಿ, ಶಿಕ್ಷಣ, ಇಂಧನ, ಉದ್ದಿಮೆ ತಾಂತ್ರಿಕತೆಗಳು, ಆರೋಗ್ಯ, ಉದ್ಯಮ 4.0, ಬಾಹ್ಯಾಕಾಶ, ಪ್ರವಾಸೋದ್ಯಮ, ನಗರ ಸೇವೆಗಳು ಸೇರಿದಂತೆ ಇತ್ಯಾದಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈಗ ರಾಷ್ಟ್ರೀಯ ಮಟ್ಟದಲ್ಲಿ ವಿಜೇತಗೊಂಡಿರುವ 14 ಉದ್ಯಮಗಳ ಪೈಕಿ 11 ನವೋದ್ಯಮಗಳು ಕರ್ನಾಟಕ ನವೋದ್ಯಮ ಕೋಶದಿಂದ ನಡೆಸಲಾಗಿದ್ದ ಎಲಿವೇಟ್/ ಐಡಿಯಾ 2ಪಿಒಸಿ ಅನುದಾನ ಕಾರ್ಯಕ್ರಮಗಳಲ್ಲಿ ಗಮನ ಸೆಳೆದು ಜಯಗಳಿಸಿವೆ ಎಂದು ಅವರು ವಿವರಿಸಿದ್ದಾರೆ.

SCROLL FOR NEXT