ಬೆಂಗಳೂರು: ವಿದ್ಯಾಗಮ ವಿವಾದ ಬಳಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ಮಧ್ಯಂತರ ರಜೆ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಇದೀಗ ಕೊರೋನಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಉಳಿದ ಶಿಕ್ಷಕರು ಹಾಗೂ ಉಪನ್ಯಾಸಕರೂ ಕೂಡ ತಮಗೂ ದಸರಾ ರಜೆ ನೀಡುವಂತೆ ಆಗ್ರಹಿಸುತ್ತಿದ್ದಾರೆ.
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ಸರ್ಕಾರ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜನೆಗೊಳಿಸಿದೆ. ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 12,000ಕ್ಕೂ ಹೆಚ್ಚು ಶಿಕ್ಷಕರು ಕೊರೋನಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಇದೀಗ ಈ ಎಲ್ಲಾ ಶಿಕ್ಷಕರೂ ಕೂಡ ತಮಗೂ ದಸರಾ ರಜೆ ನೀಡುವಂತೆ ಆಗ್ರಹಿಸುತ್ತಿದ್ದಾರೆ.
ಬೆಂಗಳೂರು ಉತ್ತರ ಮತ್ತು ದಕ್ಷಿಣ ಭಾಗದಲ್ಲಿರುವ ಶಿಕ್ಷಕರನ್ನು ಕಳೆದ 4 ತಿಂಗಳುಗಳಿಂದ ಕೊರೋನಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ದಸರಾ ರಜೆ ಬಗ್ಗೆ ಅವರಿಗೆ ಯಾವುದೇ ರೀತಿಯ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಹೇಳಿದ್ದಾರೆ.
ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಕೋವಿಡ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರಿಗೂ ರಜೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.